ಅಯೋಧ್ಯೆ ಶಿಲಾನ್ಯಾಸ- ರಾಜ್ಯದಲ್ಲಿ ಕಟ್ಟೆಚ್ಚರ, ಪೊಲೀಸರ ಜೊತೆ ಬೊಮ್ಮಾಯಿ ಸಭೆ

ಬೆಂಗಳೂರು: ಬುಧವಾರ ಅಯೊಧ್ಯೆ ರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಈ ಪ್ರಯುಕ್ತ ನಾಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಅಧಿಕಾರಿಗಳಿಗೆ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಇಂದು ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳವಂತೆ ತಿಳಿಸಿದರು.

ಈಗಾಗಲೇ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅಲ್ಲದೆ ಕೆಲ ಸಂಘಟನೆ, ಹೋರಾಟಗಾರರ ಮೇಲೆ ನಿಗಾ ವಹಿಸಲಾಗಿದೆ.

ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ಇಲ್ಲ. ಕೋಮು ಸೌಹಾರ್ಧತೆಗೆ ಧಕ್ಕೆ ತರುವವರು ಕಂಡುಬಂದರೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಅಲ್ಲದೆ ಜನನಿಬಿಡ ಪ್ರದೇಶ, ಮಾಲ್, ದೇವಸ್ಥಾನ, ಮೆಜೆಸ್ಟಿಕ್, ಮಾರ್ಕೆಟ್ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ. ಸಿಎಆರ್ ಮತ್ತು ಕೆಎಸ್‍ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Comments

Leave a Reply

Your email address will not be published. Required fields are marked *