ಉಗ್ರರ ಪೋಷಣೆ ನಿಲ್ಲಿಸಿ – ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ

ನವದೆಹಲಿ: ಭಯೋತ್ಪಾದಕರ ಪೋಷಣೆ ಮತ್ತು ಬೆಂಬಲ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಎಚ್ಚರಿಕೆ ನೀಡಿದೆ.

ಜಮ್ಮು-ಕಾಶ್ಮೀರ ಸ್ಥಳೀಯ ಚುನಾವಣೆಯಲ್ಲಿ ವಿದ್ವಂಸಕ ಕೃತ್ಯ ಎಸಗಲು ಭಯೋತ್ಪಾದಕರು ಪ್ರಯತ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಪಾಕ್ ಹೈ ಕಮಿಷನ್ ಗೆ ಸಮನ್ಸ್ ಜಾರಿ ಮಾಡಿದ್ದ ವಿದೇಶಾಂಗ ಸಚಿವಾಲಯ ಈ ಎಚ್ಚರಿಕೆ ನೀಡಿದೆ.

ವಿದೇಶಾಂಗ ಸಚಿವಾಲಯ ಸಮನ್ಸ್ ಹಿನ್ನೆಲೆ ಇಂದು ಪಾಕಿಸ್ತಾನ ಹೈ ಕಮಿಷನರ್ ದೆಹಲಿಯಲ್ಲಿರುವ ವಿದೇಶಾಂಗ ಸಚಿವಾಲಯದ ಮುಂದೆ ಹಾಜರಾಗಿದ್ದರು. ಈ ವೇಳೆ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ಘಟನೆಯನ್ನು ತೀವ್ರವಾಗಿ ಖಂಡಿಸಿದಲ್ಲದೇ, ಉಗ್ರರಿಗೆ ನೀಡುತ್ತಿರುವ ಬೆಂಬಲ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಭಾರತ ರಾಷ್ಟ್ರೀಯ ಭದ್ರತೆ ರಕ್ಷಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಸಂದೇಶ ರವಾನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಪ್ರಕ್ರಿಯೆಯನ್ನು ಹಾಳುಗೆಡವಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದು, ಇದಕ್ಕಾಗಿಯೇ ಕಳೆದ ಕೆಲವು ದಿನಗಳಿಂದ ಭಾರತದೊಳಗೆ ಶಸ್ತ್ರಾಸ್ತ್ರಗಳ ಸಮೇತ ನುಸುಳುವಂತೆ ಉಗ್ರರಿಗೆ ಪ್ರಚೋದನೆ ನೀಡುತ್ತಿದೆ. ಉಗ್ರರು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಒಳ ನುಸುಳುವ ವೇಳೆ ನಾಗ್ರೊಟಾದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ನಾಲ್ವರು ಉಗ್ರರು ಹತ್ಯೆಗೀಡಾಗಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೇನೆ ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಸಭೆ ಬೆನ್ನಲ್ಲೇ ಪಾಕ್ ಹೈ ಕಮಿಷನ್ ಗೆ ಸಮನ್ಸ್ ಜಾರಿ ಮಾಡಿ ಎಚ್ಚರಿಕೆ ನೀಡಲಾಗಿದೆ.

Comments

Leave a Reply

Your email address will not be published. Required fields are marked *