ಕಡಿಮೆ ಬೆಲೆಗೆ ಮರಳು ಒದಗಿಸಲು ಹೊಸ ನೀತಿ: ಮುರುಗೇಶ್ ನಿರಾಣಿ

ಕೊಪ್ಪಳ: ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಕಡಿಮೆ ಬೆಲೆಗೆ ಮರಳು ಮತ್ತು ಜಲ್ಲಿಕಲ್ಲು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಹೊಸ ಗಣಿಕಾರಿಕೆ ನೀತಿಯನ್ನು ಜಾರಿಗೊಳಿಸಲಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದರು. ಮನೆ ಕಟ್ಟುವ ಕನಸು ಹೊಂದಿರುವ ಪ್ರತಿಯೊಬ್ಬರಿಗೂ ಮರಳು ಮತ್ತು ಜಲ್ಲಿಕಲ್ಲು ಕಡಿಮೆ ಬೆಲೆಗೆ ಸಿಗಬೇಕು. ಈ ದೃಷ್ಟಿಯಿಂದ ರಾಜ್ಯದಲ್ಲಿ ಹೊಸ ಗಣಿ ನೀತಿಯನ್ನು ತರಲಾಗುತ್ತಿದೆ. ಹೊಸ ನೀತಿಯನ್ವಯ ಟ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರ ವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಎಫ್‍ಐಆರ್ ದಾಖಲಿಸುವುದಿಲ್ಲ. ಬದಲಿಗೆ ಮರಳು ಸಂಗ್ರಹಿಸಿ ಬೇರೆ ಬೇರೆ ಜಿಲ್ಲೆಗಳಿಗೆ ಸಾಗಾಣಿಕೆ ಮಾಡಿದರೆ ಮಾತ್ರ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲೆಡೆ ಅನಧಿಕೃತವಾಗಿ ಮರಳು ಹಾಗೂ ಜಲ್ಲಿಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಸರ್ಕಾರದ ಆದಾಯ ಪೋಲಾಗುತ್ತಿದೆ. ನಿಯಂತ್ರಣ ಮಾಡಿದಷ್ಟೂ ಅನಧಿಕೃತ ಗಣಿಗಾರಿಕೆ ಹೆಚ್ಚಾಗುತ್ತದೆ. ಹೀಗಾಗಿ ಎಲ್ಲಿ ಬೇಕಾದರೂ ಉಚಿತವಾಗಿ ಮರಳು ಪಡೆಯಬಹುದಾದ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದಾಗಿ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸುವವರಿಗೆ ಅನುಕೂಲ ಆಗಲಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವವರಿಗೆ ಇದು ವರದಾನ ಆಗಲಿದೆ ಎಂದರು.

ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಕಲ್ಲು ಗಣಿಗಾರಿಕೆ ಮಾಡುವ ಕ್ರಷರ್‍ಗಳ ಮಾಲೀಕರಿಗೆ ಕಾರ್ಯಾಗಾರ ಆಯೋಜಿಲಾಗುತ್ತದೆ. ಕಲ್ಲು ಗಣಿಗಾರಿಕೆ ಮಾಡುವ ರೀತಿ, ಗಣಿಗಾರಿಕೆ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಜ್ಞರಿಂದ, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಕ್ರಷರ್ ಮಾಲೀಕರಿಗೆ ತರಬೇತಿ ನೀಡಲು ಶೀಘ್ರ ಕಾರ್ಯಾಗಾರ ಆಯೋಜಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗಂಗಾವತಿ ಭಾಗದಲ್ಲಿ ಕಲ್ಲು ಒಡೆದು ಮಾರಾಟ ಮಾಡುವ ಮೂಲಕ ಜೀವನ ಕಟ್ಟಿಕೊಂಡ ಭೋವಿ ಜನಾಂಗದವರಿಗೆ ಅಧಿಕಾರಿಗಳು ಅನಗತ್ಯವಾಗಿ ಸಮಸ್ಯೆ ಉಂಟುಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರಿಗೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಪುರಾತತ್ವ ಇಲಾಖೆಯವರು ಐತಿಹಾಸಿಕ ಶಿಲೆಗಳಿರುವ ಪ್ರದೇಶಗಳಲ್ಲಿ ಗ್ರಾಮಗಳನ್ನು ಉಲ್ಲೇಖಿಸಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮನವಿ ಮಾಡಿದ್ದಾರೆ. ಹಾಗಾಗಿ ಅಲ್ಲಿನ ಕೆಲ ಜನರಿಗೆ ಕಲ್ಲು ಗಣಿಗಾರಿಕೆ ಮಾಡದಂತೆ ಸೂಚಿಸಿದ್ದೇವೆ ಎಂದರು.

Comments

Leave a Reply

Your email address will not be published. Required fields are marked *