ಕಣ್ಣಿಗೆ ಖಾರದ ಪುಡಿ ಎರಚಿ, 5 ತಿಂಗ್ಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

– ವಾಕಿಂಗ್ ಬಂದವರ ಕತ್ತುಕೊಯ್ದು ಬೀಕರ ಹತ್ಯೆ

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆಯ ಲಕ್ಷ್ಮೀನಗರದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯರನ್ನು ಕಾಳೇವಾಡಿ ಗ್ರಾಮದ ರಾಜಶ್ರೀ ರವಿ ಬನ್ನೂರ್ (21), ರೋಹಿಣಿ ಗಂಗಪ್ಪ ಹುಲಿಮನಿ (21) ಎಂದು ಗುರುತಿಸಲಾಗಿದೆ. ಇದರಲ್ಲಿ ಓರ್ವ ಮಹಿಳೆ ಐದು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ರಾಜಶ್ರೀ ಮತ್ತು ರೋಹಿಣಿ ಸಂಜೆ ವೇಳೆ ವಾಕ್ ಮಾಡಲು ಗ್ರಾಮದ ಬ್ರಹ್ಮದೇವರ ದೇವಸ್ಥಾನಕ್ಕೆ ಬಂದಿದ್ದಾರೆ. ಈ ವೇಳೆ ಬೈಕಿನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಕೊಲೆಗಾರರು, ಮೊದಲು ಮಹಿಳೆಯರ ಕಣ್ಣಿಗೆ ಖಾರದಪುಡಿ ಎರಚಿದ್ದಾರೆ. ಆ ನಂತರ ಮಾರಕಾಸ್ತ್ರಗಳಿಂದ ಕತ್ತುಕೊಯ್ದು ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಂತರ ಬಂದ ದಾರಿಯಲ್ಲೇ ಬೈಕ್ ತಿರುಗಿಸಿಕೊಂಡು ವಾಪಸ್ ಹೋಗಿದ್ದಾರೆ.

ಈ ಕೊಲೆಗಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *