ಕಳೆದ 5 ತಿಂಗ್ಳಿಂದ ವೃದ್ಧಾಪ್ಯ, ವಿಧವಾ, ಅಂಗವಿಕಲರನ್ನು ಸರ್ಕಾರ ಅಲೆದಾಡಿಸ್ತಿದೆ: ಹೆಚ್‍ಡಿಕೆ

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷದ ಸಂಭ್ರಮದಲ್ಲಿದ್ದರೆ, ಇತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಕ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸರ್ಕಾರ ಕಳೆದ 5 ತಿಂಗಳಿನಿಂದ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಫಲಾನುಭವಿಗಳನ್ನು ಅಲೆದಾಡಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು, ತಕ್ಷಣ ಅವರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೇ ಅಗತ್ಯ ಔಷಧಗಳನ್ನು ಕೊಳ್ಳಲೂ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆಗೆ ಆದೇಶ ಮಾಡುವಂತೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಾಧನೆ ಬಗ್ಗೆ ಪ್ರಧಾನಿ ಸಂಸದರಿಂದ ಚಪ್ಪಾಳೆ ಹೊಡೆಸಿದ್ರು – ಸಿಎಂ

ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ. ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಒಟ್ಟಿನಲ್ಲಿ ಸರ್ಕಾರ ವರ್ಷದ ಸಂಭ್ರಮದಲ್ಲಿದ್ದರೆ ವಿರೋಧಪಕ್ಷಗಳು ಸರ್ಕಾರದ ವೈಫಲ್ಯಗಳನ್ನು ಹಿಡಿದುಕೊಂಡು ಟೀಕಿಸುತ್ತಿವೆ. ಇದನ್ನೂ ಓದಿ: 24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

Comments

Leave a Reply

Your email address will not be published. Required fields are marked *