ಕೊರೊನಾನಿಂದ ದೆಹಲಿ ಆರೋಗ್ಯ ಸಚಿವರ ಪರಿಸ್ಥಿತಿ ಗಂಭೀರ- ಪ್ಲಾಸ್ಮಾ ಥೆರಪಿಗೆ ನಿರ್ಧಾರ

ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು ಪ್ಲಾಸ್ಮ ಥೆರಪಿ ಮಾಡಲು ನಿರ್ಧರಿಸಲಾಗಿದೆ.

ದೆಹಲಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತ್ಯೇಂದರ್ ಜೈನ್ ಅವರ ಶ್ವಾಸಕೋಶದಲ್ಲಿ ಸೋಂಕಿನ ಪ್ರಮಾಣ ಏರಿಕೆ ಕಂಡಿದೆ. ಹೀಗಾಗಿ ಇಂದು ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು.

ಕುಟುಂಬಸ್ಥರ ಒಪ್ಪಿಗೆ ಬಳಿಕ ಅವರಿಗೆ ಪ್ಲಾಸ್ಮಾ ಥೆರಪಿ ನೀಡಲು ನಿರ್ಧರಿಸಲಾಗಿದೆ. ಸದ್ಯ ಸತ್ಯೇಂದರ್ ಜೈನ್ ಅವರನ್ನು ಸಾಕೇತ್‍ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನಾಳೆ ಅಥವಾ ಮಾಡಿದ್ದು ಪ್ಲಾಸ್ಮಾ ಥೆರಪಿ ನಡೆಸುವ ಸಾಧ್ಯತೆ ಇದೆ.

ಸತ್ಯೇಂದರ್ ಜೈನ್ ಆರಂಭದಲ್ಲಿ ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಮೊದಲು ಕೊರೊನಾ ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಬಳಿಕ ಮತ್ತೊಮ್ಮೆ ಪರೀಕ್ಷೆ ನಡೆಸಿದಾದ ಪಾಸಿಟಿವ್ ವರದಿ ಬಂದಿತ್ತು. ಅವರು ಬಹುಬೇಗ ಗುಣಮುಖರಾಗಲಿ ಎಂದು ಗೃಹ ಸಚಿವ ಅಮಿತ್ ಶಾ, ದೆಹಲಿ ಲೆಫ್ಟಿನೆಂಟ್ ಅನೀಲ್ ಬೈಜಾಲ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾರೈಸಿದ್ದಾರೆ.

Comments

Leave a Reply

Your email address will not be published. Required fields are marked *