ಕೋವಿಡ್ ಸೋಂಕಿತ ಮಹಿಳೆ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ

ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತ ಮಹಿಳೆಯ ಪೋಷಕರು, ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಿಪಟೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಹಾಲ್ಕುರಿಕೆ ಹೆಚ್.ಎಂ ತಾಂಡ್ಯ ನಿವಾಸಿ ಪ್ರಶಾಂತಿ (40) ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಸೂಕ್ತ ಸಮಯದಲ್ಲಿ ಆಕ್ಸಿಜನ್ ನೀಡಿ ಚಿಕಿತ್ಸೆ ನೀಡದೆ ಮಹಿಳೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಸೋಂಕಿತೆ ಸಾವಿಗೆ ಕಾರಣವಾಯಿತು ಎಂದು ಮೃತ ಮಹಿಳೆಯ ಸೋದರ ಕಿರಣ್ ಆರೋಪಿಸಿದ್ದಾರೆ.

ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಕ್ಸಿಜನ್ ಹಾಗೂ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೋಂಕಿತರಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದರೆ ನಮ್ಮ ತಂಗಿಯನ್ನು ಬದುಕಿಸಬಹುದಿತ್ತು. ಆದರೆ ವೈದ್ಯರು ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದರಿಂದ ನನ್ನ ತಂಗಿ ಸಾವನ್ನಪ್ಪಿದ್ದಾಳೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕಂಪಾರಳ್ಳಿ ಮೂಲದ ಕೋವಿಡ್ ಸೋಂಕಿತ ನಿವಾಸಿಯೊಬ್ಬರು ಮಾತನಾಡಿ, ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ವಾರ್ಡ್‍ನಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ರಾತ್ರಿವೇಳೆಯಲ್ಲಿ ರೋಗಿಗಳಿಗೆ ಯಾವ ಸಿಬ್ಬಂದಿಯೂ ಬಂದು ನೋಡುವುದಿಲ್ಲ. ಕುಡಿಯುವ ನೀರಿಗೂ ಪರದಾಡುತ್ತಿದ್ದೇವೆ. ಶೌಚಾಲಯಗಳು ಗಬ್ಬೆದ್ದು ನಾರುತ್ತಿವೆ. ಶೌಚಾಲಯಕ್ಕೆ ಬಳಸಲು ನೀರಿಲ್ಲ ಎಂದು ಆರೋಪಿಸಿದರು.

Comments

Leave a Reply

Your email address will not be published. Required fields are marked *