ಗ್ರಾಮೀಣ ಪ್ರದೇಶಕ್ಕೂ ಸೋಂಕು!- ಮತ್ತಷ್ಟು ಮುಂಜಾಗ್ರತಾ ಕ್ರಮ

-ಬಲವಂತವಾಗಿ ಲಾಕ್‍ಡೌನ್ ವಿಧಿಸುವುದಿಲ್ಲ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಧಾನವಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಾಳೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಉತ್ತಮ ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ, ಕಳೆದ ಒಂದು ವಾರದಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸ್ವಯಂ ನಿಯಂತ್ರಣ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದರು.

ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳ ಸೇರಿದಂತೆ ಸುಮಾರು 30 ಸಂಘ ಸಂಸ್ಥೆಗಳ 60 ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಸ್ವಯಂ ಪ್ರೇರಿತರಾಗಿ ಭಾಗಶಃ ಲಾಕ್‍ಡೌನ್ ವಿಧಿಸುವುದು ಸೇರಿದಂತೆ ಎಲ್ಲಾ ಸಾಧ್ಯತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಅಂಗಡಿ ಮುಂಗಟ್ಟುಗಳನ್ನು ತೆರೆಯುವ ಅವಧಿಯನ್ನು ಸೀಮಿತಗೊಳಿಸುವುದು, ದಿನ ಬಿಟ್ಟು ದಿನ ಅಂಗಡಿ ತೆರೆಯುವುದು, ಸಂಪೂರ್ಣ ಲಾಕ್‍ಡೌನ್ ಸೇರಿದಂತೆ ಎಲ್ಲಾ ಸಾಧ್ಯತೆಗಳನ್ನು ಸಭೆಯ ಮುಂದಿರಿಸಿ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಜಿಲ್ಲಾಡಳಿತ ಬದ್ಧವಾಗಿರುತ್ತದೆ. ಜೊತೆಗೆ ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಲಾಕ್‍ಡೌನ್ ಬಲವಂತವಾಗಿ ಹೇರುವುದಿಲ್ಲ. ನಾಳೆಯ ಸಭೆಯಲ್ಲಿ ಸಂಘ ಸಂಸ್ಥೆಗಳ ಮುಖಂಡರು ನೀಡುವ ಅಭಿಪ್ರಾಯಕ್ಕೆ ಜಿಲ್ಲಾಡಳಿತ ಬದ್ಧವಾಗಿರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *