ಚಲಿಸುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಬೆಂಗಳೂರು ಮಂಗಳೂರು ಹೆದ್ದಾರಿ ಬಂದ್

ಹಾಸನ: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೆಂಪುಹೊಳೆ ಸಮೀಪ ಗ್ಯಾಸ್ ಸೋರಿಕೆಯಾಗುತ್ತಿದ್ದು, ಗ್ಯಾಸ್ ಟ್ಯಾಂಕರ್‍ ನ್ನು  ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಲಾಗಿದೆ. ಇದರಿಂದಾಗಿ ಮಂಗಳೂರು ಬೆಂಗಳೂರು ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಬರುವ ವಾಹನವನ್ನು ಗುಂಡ್ಯ ಗೇಟ್ ಬಳಿ ತಡೆದು ನಿಲ್ಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿರುವ ವಾಹನವನ್ನು ಮಾರನಹಳ್ಳಿ ಗೇಟ್ ಸಮೀಪ ತಡೆದು ನಿಲ್ಲಿಸಲಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಬಂದು ಮಾರ್ಗಮಧ್ಯದಲ್ಲಿರುವ ಹಲವಾರು ಜನ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಮಾಣಿ ಮೈಸೂರು ರಸ್ತೆಯಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಗ್ಯಾಸ್ ಸೋರಿಕೆಯಾಗುತ್ತಿರುವ ಟ್ಯಾಂಕರ್ ನ್ನು ಮಂಗಳೂರಿನಿಂದ ಆಗಮಿಸಿರುವ ತಜ್ಞರ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

Comments

Leave a Reply

Your email address will not be published. Required fields are marked *