ಚೀನಾದ 43 ಸೈನಿಕರು ಮಟಾಶ್- ಭಾರತದ 20 ಮಂದಿ ಯೋಧರು ಹುತಾತ್ಮ

ನವದೆಹಲಿ: ಚೀನಾಗೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದು, ದಾಳಿಯಲ್ಲಿ ಚೀನಾದ 43 ಯೋಧರು ಬಲಿಯಾಗಿದ್ದಾರೆ.

ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು  ಎಲ್‍ಎಸಿ ಬಳಿ ಹಾರಾಟ ನಡೆಸಿವೆ  ಎಂದು ವರದಿಯಾಗಿದೆ.

ಇತ್ತ ಘರ್ಷಣೆ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಸೇನೆ, ನಮ್ಮ ಮತ್ತು ಚೀನಾದ ಸೈನಿಕರು ಗಾಲ್ವಾನ್ ಪ್ರದೇಶದಿಂದ ಹೊರ ಬಂದಿದ್ದಾರೆ. ಆದರೆ ಜೂನ್ 15 ಹಾಗೂ 16ರಂದು ನಡೆದ ದಾಳಿಯಲ್ಲಿ 17 ಭಾರತೀಯ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲದೆ ಒಟ್ಟು 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದೆ.

ಲಡಾಖ್‍ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ಚೀನಾದ ಸೈನಿಕರು ಹಿಂಸಾತ್ಮಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿದ್ದರು. ಇದರಿಂದಾಗಿ ಇಂದು ಸೇನೆ ಪ್ರತಿಕಾರ ತಿರಿಸಿಕೊಂಡಿದೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಕರ್ನಲ್ ಸಂತೋಷ್ ಬಾಬು ಹಾಗೂ ಇಬ್ಬರು ಯೋಧರು ಸಾವನ್ನಪ್ಪಿದ್ದರು. ಚೀನಾ ಕೂಡ ಸಾವು-ನೋವುಗಳನ್ನು ಅನುಭವಿಸಿತ್ತು. ಈ ಹಿಂದೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.

Comments

Leave a Reply

Your email address will not be published. Required fields are marked *