ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ – ಗೋಕಾಕ್ ಬಂದ್ ಮಾಡಿ ಅಭಿಮಾನಿಗಳಿಂದ ಆಕ್ರೋಶ

– ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು

ಚಿಕ್ಕೋಡಿ/ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸದಂತೆ ಅವರ ಅಭಿಮಾನಿಗಳು ಹೋರಾಟ ನಡೆಸುತ್ತಿದ್ದು, ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೆ ಗೋಕಾಕ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗೋಕಾಕ್‍ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳು, ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮೇಶ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಸಹ ಇದೇ ವೇಳೆ ಮಾಡಿದ್ದಾರೆ.

ಗೋಕಾಕ್ ನಗರಸಭೆ ಸದಸ್ಯರು ಸೇರಿದಂತೆ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆ ಅಂಗೀಕರಿಸದಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಅಂಗೀಕರಿಸಿದರೆ ಬಿಜೆಪಿ ಹೈಕಮಾಂಡ್‍ಗೆ ವಿರುದ್ಧವೇ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಜಿಲ್ಲೆ ಬಂದ್ ಮಾಡಿ, ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿಯವರನ್ನು ಸಚಿವ ಸ್ಥಾನದಿಂದ ತೆಗೆದಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಲವಂತವಾಗಿ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಗೋಕಾಕ್‍ನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದೆ.

ಗೋಕಾಕ್ ನಗರದ ಅಂಗಡಿ ಮುಂಗಟ್ಟುಗಳನ್ನು ಬೆಂಬಲಿಗರು ಬಂದ್ ಮಾಡುತ್ತಿದ್ದು, ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಪೂರ್ವಕವಾಗಿ ಗಲಾಟೆ ಮಾಡುತ್ತಿದ್ದಾರೆ. ಹೀಗಾಗಿ ಗೋಕಾಕ್ ನಗರದ ಅಂಗಡಿಗಳು ಸಂಪೂರ್ಣ ಬಂದ್ ಆಗಿವೆ. ಜಾರಕಿಹೊಳಿ ಬೆಂಬಲಿಗರಿಂದ ಬಸವ ವೃತ್ತದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪೊಲೀಸರು ಮಾತ್ರ ಅಸಹಾಯಕರಾಗಿ ನಿಂತಿದ್ದಾರೆ.

ಬಿಜೆಪಿ ಹೈಕಮಾಂಡ್ ವಿರುದ್ಧ ಜಾರಕಿಹೊಳಿ ಬೆಂಬಲಿಗರು ಗುಡಗಿದ್ದು, ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈ ಕಮಾಂಡ್ ವಿರುದ್ಧವೇ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಚಿವ ರಮೇಶ್ ಜಾರಕಿಹೊಳಿ ಮನೆ ಎದುರು ನೂರಾರು ಬೆಂಬಲಿಗರು ಜಮಾಯಿಸಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು. ಒಂದು ವೇಳೆ ಪಕ್ಷ ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈಕಮಾಂಡ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಜಾರಕಿಹೊಳಿ ಬೆಂಬಲಿಗರು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *