ಡಾ. ನಾಗೇಂದ್ರ ಪತ್ನಿಗೆ ಉಪನ್ಯಾಸಕಿ ಹುದ್ದೆ ನೀಡಲಾಗುವುದು: ಸುಧಾಕರ್

– ಕುಟುಂಬಕ್ಕೆ 30 ಲಕ್ಷ ಪರಿಹಾರ

ಮೈಸೂರು: ಇಂದು ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಆರೋಗ್ಯಾಧಿಕಾರಿ ಪತ್ನಿಗೆ ಉಪನ್ಯಾಸಕಿ ಹುದ್ದೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ಡಾ. ನಾಗೇಂದ್ರ ಅವರ ಅಂತಿಮ ದರ್ಶನ ಪಡೆದ ಸುಧಾಕರ್ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣವನ್ನು ತನಿಖೆ ಮಾಡುವ ಸ್ವರೂಪದ ವಿಚಾರವಾಗಿ ನಾಳೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನು ಓದಿ: ಮೊದಲು ನೀವು ಇಲ್ಲಿಂದ ಹೊರಟು ಹೋಗಿ- ಸುಧಾಕರ್‌ಗೆ ವೈದ್ಯೆ ತರಾಟೆ

ಈ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು. ಮೃತರ ಕುಟುಂಬದ ರಕ್ಷಣೆ ಮಾಡುವುದು ಸರ್ಕಾರದ ಹೊಣೆಯಾಗಿದೆ. ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ಈಗಾಗಲೇ ಸರ್ಕಾರ 30 ಲಕ್ಷ ಪರಿಹಾರ ಘೋಷಣೆ ಮಾಡಿದೆ. ನಾಳೆ ಸಿಎಂ ಜೊತೆ ಚರ್ಚೆ ಮಾಡಿ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ನಿರ್ಧಾರ ಮಾಡುತ್ತೇವೆ. ಇದು ಉದ್ದೇಶಪೂರ್ವಕವಾಗಿ ಆಗಿರುವ ಘಟನೆ ಅಲ್ಲ. ಎಲ್ಲರಿಗೂ ಕೆಲಸ ಒತ್ತಡವಿದೆ. ಈ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದರು.

ಆರೋಗ್ಯಾಧಿಕಾರಿ ನಾಗೇಂದ್ರ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Comments

Leave a Reply

Your email address will not be published. Required fields are marked *