ತೌಕ್ತೆ ಚಂಡಮಾರುತದ ಅಬ್ಬರ, ಕೊಡಗಿನಲ್ಲಿ ನಿರಂತರ ಮಳೆ- ಆತಂಕದಲ್ಲಿ ಜನತೆ

ಮಡಿಕೇರಿ: ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸಹ ಗಾಳಿಯ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ.

ಮಡಿಕೇರಿ, ಗೋಣಿಕೊಪ್ಪಲು, ಸಿದ್ದಾಪುರ, ಪೊನ್ನಂಪೇಟೆ, ವಿರಾಜಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿತ್ತು. ಈಗ ಚಂಡಮಾರುತದ ಪರಿಣಾಮ ಮತ್ತೆ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ಕಾವೇರಿ ನದಿ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನಮಟ್ಟ ಸ್ವಲ್ಪ ಏರಿಕೆಯಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡಗಾಡು ಪ್ರದೇಶದ ಜನರಲ್ಲಿ ಮತ್ತೆ ಅತಂಕ ಮನೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಕೊಡಗಿನಲ್ಲಿ ಇದೀಗ ಚಂಡಮಾರುತ ಪರಿಣಾಮದಿಂದಾಗಿ ಜನರಲ್ಲಿ ಅತಂಕ ಮನೆಮಾಡಿದೆ. ಗಾಳಿ ಹೆಚ್ಚಾಗಿರುವ ಪರಿಣಾಮದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಧರೆಗುರುಳುತ್ತಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಭಾಗದ ಜನರು ರಾತ್ರಿ ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಗೆ ಈಗಾಗಲೇ ಎನ್‍ಡಿಅರ್‍ಎಫ್ ತಂಡ ಅಗಿಮಿಸಿದ್ದು, ಮಳೆ ಅನಾಹುತ ಸಂಭವಿಸುವ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *