ಧಾರವಾಡದ ಮೆಣಸಿನಕಾಯಿ ವ್ಯಾಪಾರಿ ಗುಣಮುಖ- ಆಸ್ಪತ್ರೆಯಿಂದ ಡಿಸ್ಚಾರ್ಜ್

ಧಾರವಾಡ: ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆ ಮೆಣಸಿನಕಾಯಿ ವ್ಯಾಪಾರಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

ಧಾರವಾಡದ ಹೊಸಯಲ್ಲಾಪುರದ ಕೋಳಿಕೆರೆ ಅಗಸಿ ನಿವಾಸಿ 35 ವರ್ಷದ ಮೆಣಸಿನಕಾಯಿ ವ್ಯಾಪಾರಿ ರೋಗಿ ನಂ.705 ಸಂಪೂರ್ಣ ಗುಣಮುಖರಾಗಿದ್ದು, ಬುಧವಾರ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮೇ 7ರಂದು ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ನಿರಂತರ ಚಿಕಿತ್ಸೆ ನಂತರ ಇದೀಗ ಗುಣಮುಖರಾಗಿದ್ದು, 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ. ಅಲ್ಲದೆ ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ಇದುವರೆಗೆ 11 ಜನ ಕೊರೊನಾ ವೈರಸ್‍ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Comments

Leave a Reply

Your email address will not be published. Required fields are marked *