ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ಸಿದ್ದರಾಮಯ್ಯ

ಮೈಸೂರು: ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದ್ದರೆ, ಇತ್ತ ಕರ್ನಾಟಕದಲ್ಲಿ ದೇಣಿಗೆ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ. ಈ ಸಂಬಂಧ ಮಾತನಾಡುತ್ತಾ ಸಿದ್ದರಾಮಯ್ಯ ಅವರು, ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುವುದಾಗಿ ಮಾಹಿತಿ ನೀಡಿದರು.

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ. ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದರು.

ಜನರು ರಾಮಮಂದಿರಕ್ಕೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕೆ ಕೊಡಬೇಕಾಗಿರುವುದು ಅವರ ಕೆಲಸ ಕೇಳುವುದು ನಮ್ಮ ಹಕ್ಕು ಎಂದು ಕಟುವಾಗಿ ಹೇಳಿದ್ದಾರೆ.

ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗವಾಗುತ್ತಿದೆ. ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಅವರೇ ಹೇಳಬೇಕು ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.

Comments

Leave a Reply

Your email address will not be published. Required fields are marked *