ನ್ಯಾಯ ಸಿಗುವುದು ತಡವಾದರೂ, ನಿರಾಕರಿಸಲಾಗಿಲ್ಲ: ಸುರೇಶ್ ಕುಮಾರ್

ಬೆಂಗಳೂರು: ನ್ಯಾಯ ಸಿಗುವುದು ತಡವಾಗಿದೆ. ಆದರೆ ನಿರಾಕರಿಸಲಾಗಿಲ್ಲ ಎಂದು ಬಾಬ್ರಿ ಮಸೀದಿ ದ್ವಂಸದ ತೀರ್ಪಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

28 ವರ್ಷದ ಹಿಂದೆ ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಈ ಪ್ರಕರಣವು ಕಳೆದ 28 ವರ್ಷದಿಂದ ನ್ಯಾಯಾಲಯದಲ್ಲಿತ್ತು. ಇಂದು ಇದರ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾ.ಸುರೇಂದ್ರ ಕುಮಾರ್ ಯಾದವ್, ಇದು ಇಂದು ಆಕಸ್ಮಿಕ ಘಟನೆ. ಇದು ಪೂರ್ವ ನಿಯೋಜಿತ ಕೃತ್ಯವಲ್ಲ ಎಂದು ಹೇಳಿ ಪ್ರಕರಣದಲ್ಲಿದ್ದ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.

ಈ ತೀರ್ಪಿನಿಂದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಸುರೇಶ್ ಕುಮಾರ್ ಅವರು, ವಿಳಂಬವಾದರೂ ಸಂಪೂರ್ಣ ನ್ಯಾಯ ನೀಡಿದ ತೀರ್ಪಿಗೆ ಧನ್ಯವಾದಗಳು ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಇಂಗ್ಲಿಷಿನಲ್ಲಿ ಟ್ವೀಟ್ ಮಾಡಿ ನ್ಯಾಯ ಸಿಗುವುದು ತಡವಾದರೂ, ನಿರಾಕರಿಸಲಾಗಿಲ್ಲ ಎಂದಿದ್ದಾರೆ.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಈಗ ಈ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.

32 ಮಂದಿಆರೋಪಿಗಳು ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್‍ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

Comments

Leave a Reply

Your email address will not be published. Required fields are marked *