ಬಿಟ್ಟಿ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಮಾತಾಡೋದು ಸರಿಯಲ್ಲ: ರೇಣುಕಾಚಾರ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರು ಬಿಟ್ಟಿ ಪ್ರಚಾರಕ್ಕೆ ಮಾತನಾಡೋದು ಸರಿಯಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಈ ವರ್ಷ ಎರಡನೇ ಅಲೆ ಬಂದಿದೆ. ಕಳೆದ ವರ್ಷ ಸರ್ಕಾರಿ ನೌಕರರ ವೇತನದಲ್ಲಿ ಕಡಿತ ಮಾಡಲಾಗಿತ್ತು. ಈ ಸಲ ನೌಕರರ ವೇತನದಲ್ಲಿ ಕಡಿತ ಮಾಡಿಲ್ಲ. ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಹಿಂದೆ ಪರಿಹಾರ ಕೊಟ್ರು ಎಂದರು.

ಕೋವಿಡ್ ಬಂದ್ರೂ ಅಭಿವೃದ್ಧಿಗೆ ಹಿನ್ನಡೆ ಆಗಿಲ್ಲ. ಕ್ಷೇತ್ರಗಳ ಅಭಿವೃದ್ಧಿಗೂ ಹಣ ಕೊಟ್ಟಿದ್ದಾರೆ. ಬಿಟ್ಟಿ ಪ್ರಚಾರಕ್ಕೆ ಮಾತಾಡೋದು ಸರಿಯಲ್ಲ. ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಟೀಕೆ ಮಾಡೋದು ಬೇಡ. ಕಾಂಗ್ರೆಸ್ ನಾಯಕರು ಸಲಹೆ ಕೊಡಲಿ. ಸಿಎಂ ರಾಜೀನಾಮೆ ಕೇಳೋದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದರು.

ಪ್ರತಿಪಕ್ಷಗಳು ಸಲಹೆ ಕೊಡಲಿ. ಚುನಾವಣೆ ಬಂದಾಗ ರಾಜಕೀಯ ಮಾಡಿ, ಈಗ ಬೇಡ. ಜನರನ್ನು ಸಂಕಷ್ಟದಿಂದ ಪಾರು ಮಾಡಲು ಸಿಎಂ ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ವಿಚಾರಕ್ಕೆ ಬೊಮ್ಮಾಯಿ, ವಿಜಯೇಂದ್ರ ಕೇಂದ್ರದ ನಾಯಕರನ್ನು ಭೇಟಿ ಮಾಡಿದ್ದಾರೆ. ಕೋವಿಡ್ ನಿರ್ವಹಣೆ ವಿಚಾರಕ್ಕೆ ಕೇಂದ್ರಕ್ಕೆ ತೃಪ್ತಿ ಇದೆ. ನಾಯಕತ್ವ ಬದಲಾವಣೆ ಆಗುತ್ತೆ, ಅನ್ನೋದೆಲ್ಲ ಸತ್ಯಕ್ಕೆ ದೂರವಾದ ವಿಷಯ ಎಂದು ರೇಣುಕಾಚಾರ್ಯ ಸ್ಪಷ್ಟನೆ ನೀಡಿದರು.

ಇದೇ ವೇಳೆ ಸಚಿವ ಸಿ.ಪಿ ಯೋಗೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ರೇಣುಕಾಚಾರ್ಯ, ದೆಹಲಿಗೆ ಹೋಗಿ ದೂರು ಕೊಡೋರು ಆತ್ಮಾವಲೋಕನ ಮಾಡಿಕೊಳ್ಳಲಿ. ಮಂತ್ರಿ ಆದೋರು ಇಂಥ ವೇಳೆ ಕೆಲಸ ಮಾಡಬೇಕು. ಕ್ಷೇತ್ರದಲ್ಲಿದ್ದು ಜನರ ಕೆಲಸ ಮಾಡಬೇಕು. ರಾಜಕೀಯ ಮಾಡೋದಲ್ಲ. ದೂರು ಕೊಡೋದ್ರಿಂದ ಏನೂ ಪ್ರಯೋಜನ ಇಲ್ಲ. ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ಎಂದು ರೇಣುಕಾಚಾರ್ಯ ತಿಳಿಸಿದರು.

Comments

Leave a Reply

Your email address will not be published. Required fields are marked *