ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ

ಬೆಂಗಳೂರು: ಬಿಪಿಎಲ್ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕತ್ತಿ, ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಕತ್ತಿ ಈ ಹಿಂದೆ ಹೇಳಿದ್ದೇನು..?
ಈ ಹಿಂದೆ ಸಚಿವರು, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.

ಏಪ್ರಿಲ್ ಬಳಿಕ ಸರ್ಕಾರ ಕಾರ್ಡ್ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅವರಿಗೆ ದಂಡದ ಜೊತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದರು.

ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂ. ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಹೀಗಾಗಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ. ಈ ಕಾರಣಕ್ಕೆ ಕಾರ್ಡ್ ಹೊಂದಿದವರಿಗೆ ಮತ್ತೊಂದು ಅವಕಾಶವನ್ನು ಸರ್ಕಾರ ನೀಡುತ್ತಿದೆ. ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡ್ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಬಳಿಕ ಸರ್ಕಾರವೇ ಸರ್ವೇ ನಡೆಸಿ ಪತ್ತೆ ಹಚ್ಚಲಿದೆ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *