ಬೆಂಗ್ಳೂರಲ್ಲಿ 6 ರಿಂದ 9ನೇ ತರಗತಿ ಇಲ್ಲ, ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ: ಸುರೇಶ್ ಕುಮಾರ್

ಬೆಂಗಳೂರು: ಸಿಲಿಕಾನ್ ಸಿಟಿ ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.

ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಜೆ ಬಗ್ಗೆ ನಿರ್ಧಾರ ಮಾಡಲಾಗುತ್ತೆ ಎಂದು ಶಿಕ್ಷಣ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

Comments

Leave a Reply

Your email address will not be published. Required fields are marked *