ಮಹಾಜನ್ ವರದಿಯೇ ಅಂತಿಮ, ಸೌಹಾರ್ದತೆ ಕೆಡಿಸಬೇಡಿ: ಬಿಎಸ್‍ವೈ ತಿರುಗೇಟು

ಬೆಂಗಳೂರು: ಬೆಳಗಾವಿ ನಮ್ಮದು ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಬಗ್ಗೆ ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೌನ ಮುರಿದಿದ್ದಾರೆ.

ಉದ್ಧವ್ ಠಾಕ್ರೆ ಟ್ವೀಟ್ ಗೆ ಇಂದು ಸಿಎಂ ಬಿಎಸ್‍ವೈ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿದ್ದಾರೆ. ಇದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಮುಖ್ಯಮಂತ್ರಿ ಬರೆದುಕೊಂಡಿದ್ದಾರೆ.

ಉದ್ಧವ್ ಠಾಕ್ರೆ ಹೇಳಿದ್ದೇನು..?
ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಹುಸಂಖ್ಯೆಯಲ್ಲಿ ಮರಾಠಿ ಭಾಷಿಕರಿರುವ ಹಾಗೂ ಮರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಟ್ವೀಟ್ ಮಾಡಿತ್ತು.

Comments

Leave a Reply

Your email address will not be published. Required fields are marked *