ಮೂರು ದಿನಗಳಲ್ಲಿ 5 ಸಾವು – ಬಳ್ಳಾರಿಯಲ್ಲಿ ಕೊರೊನಾ ರಣಕೇಕೆ

ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 7ಕ್ಕೇರಿದೆ.

ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗದ ನಿವಾಸಿ 28 ವರ್ಷದ ಯುವಕ ಹಾಗೂ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ 59 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜೂನ್ 18ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಯುವಕ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. 59 ವರ್ಷದ ವ್ಯಕ್ತಿ ಸಹ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಈ ವ್ಯಕ್ತಿ ಜಿಂದಾಲ್ ಗುತ್ತಿಗೆ ನೌಕರರ ಕಾಂಟ್ಯಾಕ್ಟ್‍ನಲ್ಲಿ ಇದ್ದ ಕಾರಣ ಜಿಂದಾಲ್ ನೌಕರರಿಂದ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.

ಉಸಿರಾಟದ ತೊಂದರೆ ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಇವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದ್ದಾಗ ಇವರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಕೊರೊನಾ ಮಹಾಮಾರಿಗೆ ನಿನ್ನೆಯೂ ಇಬ್ಬರು ಬಲಿಯಾಗಿದ್ದು, ಇಂದು ಮತ್ತಿಬ್ಬರು ಸಾವನ್ನಪ್ಪಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

Comments

Leave a Reply

Your email address will not be published. Required fields are marked *