ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡು ಸರ್ಕಾರದಿಂದ ಹೊಸ ತಂತ್ರ

ಚೆನೈ: ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರ, ಯೋಜನೆಗೆ ಅಡ್ಡಿವುಂಟು ಮಾಡಲು ಹೊಸ ಪ್ರಯತ್ನವೊಂದನ್ನು ಆರಂಭಿಸಿದೆ. ಆಣೆಕಟ್ಟು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ ಬೆನ್ನಲ್ಲೇ ಸರ್ವ ಪಕ್ಷಗಳ ಸಭೆ ಕರೆಯಲು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ.

ಜುಲೈ 12ರಂದು ಎಂ.ಕೆ.ಸ್ಟಾಲಿನ್ ಸರ್ವಪಕ್ಷ ಸಭೆ ಕರೆದಿದ್ದು, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಸಭೆಯ ಉದ್ದೇಶ ಎಂದು ಹೇಳಾಗಿದೆ. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಚಿಂತಿಸಿವೆ.

ಕಳೆದ ಎರಡು ದಿನಗಳ ಹಿಂದೆ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಮೇಕೆದಾಟು ಯೋಜನೆಗೆ ತಡೆವೊಡ್ಡಂತೆ ಸಿಎಂ ಬಿಎಸ್‍ವೈ ಬರೆದಿದ್ದ ಪತ್ರಕ್ಕೂ ಸಿಎಂ ಎಂ.ಕೆ.ಸ್ಟಾಲಿನ್ ಖಾರವಾಗಿ ಪ್ರತಿಕ್ರಿಯಿಸಿದ್ದರು.

ತಮಿಳುನಾಡಿನ ಸರ್ಕಾರದ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡಲು ತೀರ್ಮಾನಿಸಿದೆ. ಈ ಹಿನ್ನಲೆ ಸರ್ವ ಪಕ್ಷ ಸಭೆ ನಡೆಸುವ ಮೂಲಕ ಒಮ್ಮತದ ನಿರ್ಧಾರ ಕೈಗೊಂಡು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ತಮಿಳುನಾಡು ಸರ್ಕಾರ ಪ್ಲ್ಯಾನ್ ಮಾಡಿದೆ.

Comments

Leave a Reply

Your email address will not be published. Required fields are marked *