ಮೋದಿ ವೈಫಲ್ಯ ಮುಚ್ಚಲು ಬಿಎಸ್‌ವೈ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದ್ದಾರೆ – ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ.. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

2020-21ರ ಅಂತ್ಯಕ್ಕೆ ಸಾಲದ ಪ್ರಮಾಣ 3,68,692 ಕೋಟಿ ರೂ. ಆಗಬಹುದೆಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಹೇಳಿದ್ದರು. ಕೊರೊನಾದಿಂದಾಗಿ ತೆರಿಗೆ ಸಂಗ್ರಹ ಗಣನೀಯವಾಗಿ ಕುಸಿದ ಪರಿಣಾಮ ಆರ್ಥಿಕ ಜವಾಬ್ದಾರಿಯನ್ನು ತೂಗಿಸಲು ಇನ್ನಷ್ಟು ಸಾಲ ಮಾಡುವುದು ಅನಿವಾರ್ಯವಾಗಬಹುದು. ವಿತ್ತೀಯ ಕೊರತೆಯೂ ಖಂಡಿತ ಹೆಚ್ಚಲಿದೆ. ಇದರ ಜೊತೆಗೆ ಜಿಎಸ್ ಟಿ ಪರಿಹಾರಕ್ಕಾಗಿಯೂ ಆರ್ ಬಿ ಐಯಿಂದ ಸಾಲ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಇದರಿಂದ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆ ನಿಗದಿಪಡಿಸಸಿರುವ ಶೇ.25ರ ಮಿತಿಯನ್ನು ನಮ್ಮ ಒಟ್ಟು ಸಾಲದ ಮೊತ್ತ ಮೀರಲಿದ್ದು ರಾಜ್ಯ ದಿವಾಳಿ ಸ್ಥಿತಿಗೆ ತಲುಪಲು ಇನ್ನೇನು ಬೇಕು ಎಂದು ಕಿಡಿಕಾರಿದ್ದಾರೆ.

ಈ ಸಾಲದ ಸುಳಿ ಕೇವಲ 11,324 ರೂ. ಕೋಟಿಗಷ್ಟೇ ಖಂಡಿತ ಸೀಮಿತವಾಗಲಾರದು. ಇದು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾಗಿರುವ ಒಟ್ಟು ಜಿಎಸ್ ಟಿ ಪರಿಹಾರ ಮೊತ್ತವಾದ 97,000 ಕೋಟಿ ರೂ.ನಲ್ಲಿ ರಾಜ್ಯದ ಪಾಲು ಅಷ್ಟೆ. ಇದರ ಜೊತೆಯಲ್ಲಿ ಕೇಂದ್ರ ಸರ್ಕಾರ ಕೊರೊನಾದಿಂದಾಗಿ ಜಿಎಸ್ ಟಿ ಒಟ್ಟು ನಷ್ಟ 2,35,00 ಕೋಟಿ ರೂ. ಎಂದು ಅಂದಾಜು ಮಾಡಿದೆ. ಇದನ್ನು ಕೇಂದ್ರ ಸರ್ಕಾರ ತುಂಬಿಕೊಡಲಿದೆಯೇ? ಇಲ್ಲವೇ ಇದನ್ನು ಕೂಡಾ ರಾಜ್ಯ ಸರ್ಕಾರದ ತಲೆಗೆ ಹೇರಿ ಸಾಲ ಮಾಡಲು ಆದೇಶ ನೀಡಲಿದೆಯೇ ಎಂದು ಖಾರವಾಗಿಯೇ ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬೀದಿಗಿಳಿದು ರಾಜ್ಯ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಎಳೆಎಳೆಯಾಗಿ ಬಿಚ್ಚಿಡಲಿದೆ.

Comments

Leave a Reply

Your email address will not be published. Required fields are marked *