ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್‍ಗೆ ಸಿದ್ದು ಖಂಡನೆ

– ರಾಜಕೀಯ ದುಷ್ಟತನದ ಪರಮಾವಧಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಮನೆಯ ಮೇಲೆ ರೇಡ್ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಮನೆಯ ಮೇಲೆ ಸಿಬಿಐ ರೇಡ್‍ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಡಿಕೆಶಿಗೆ ಶಾಕ್- ಮನೆ ಮೇಲೆ ಸಿಬಿಐ ದಾಳಿ

ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಮನೆಯ ಮೇಲಿನ ಸಿಬಿಐ ರೇಡ್‍ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ” ಎಂದು ಖಂಡಿಸಿದ್ದಾರೆ.

ಅಷ್ಟೇ ಅಲ್ಲದೇ “ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಕೆಶಿ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *