ರಾಜಸ್ಥಾನ ರಾಜಕೀಯ ಬಿಕ್ಕಟ್ಟು- ಸಚಿನ್ ಪೈಲಟ್‍ಗೆ ಗೇಟ್ ಪಾಸ್

ಜೈಪುರ: ರಾಜಸ್ಥಾನ ಕಾಂಗ್ರೆಸ್‍ನಲ್ಲಿ ಬಂಡಾಯದ ಬಾವುಟ ಹಿಡಿದಿದ್ದ ಸಚಿನ್ ಪೈಲಟ್ ಗೆ ಕೈ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದೆ.

ಇಂದು ಬೆಳಗ್ಗೆ 11 ಗಂಟೆಗೆ ರಾಜಸ್ಥಾನ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭಗೊಂಡಿತ್ತು. ಸಚಿನ್ ಪೈಲಟ್ ಬಣದಲ್ಲಿ ಗುರುತಿಸಿಕೊಂಡ ಶಾಸಕರು ಸಿಎಲ್‍ಪಿ ಸಭೆಗೆ ಗೈರಾಗಿದ್ದಾರೆ. ಗೈರಾದ ಶಾಸಕರ ವಿರುದ್ಧ ಕಾನೂನು ಕ್ರಮಗಳನ್ನು ಕಾಂಗ್ರೆಸ್ ನಿರ್ಧರಿಸಿದೆ. ಇದೇ ವೇಳೆ ಸಚಿನ್ ಪೈಲಟ್ ಅವರನ್ನು ಉಚ್ಛಾಟನೆ ಮಾಡುವ ಕುರಿತ ಚರ್ಚೆಗಳು ನಡೆದಿವೆ.

ಸಚಿನ್ ಪೈಲಟ್ ಉಚ್ಛಾಟನೆಯ ಮಾಹಿತಿ ನೀಡಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ರಣ್‍ದೀಪ್ ಸುರ್ಜೆವಾಲಾ, ಜನರಿಂದ ಆಯ್ಕೆಯಾದ ಸರ್ಕಾರವನ್ನು ಪತನ ಮಾಡಲು ಸಚಿನ್ ಪೈಲಟ್ ಮುಂದಾಗಿದ್ದರು. ಈ ಹಿನ್ನೆಲೆ ಡಿಸಿಎಂ ಮತ್ತು ಪ್ರದೇಶ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ. ಬಿಜೆಪಿ ಐಟಿ ಮತ್ತು ಇಡಿ ಮೂಲಕ ಕಾಂಗ್ರೆಸ್ ಶಾಸಕರನ್ನು ಬೆದರಿಸಿ ಖರೀದಿಗೆ ಮುಂದಾಗಿದೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಗಣೇಶ್ ಗೋಗರಾ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಪೈಲಟ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಸಚಿವರಾದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀಣಾ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.

Comments

Leave a Reply

Your email address will not be published. Required fields are marked *