ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು

ನವದೆಹಲಿ: ಆಸ್ಟ್ರೇಲಿಯಾದಲ್ಲಿ ಉನ್ನತವ್ಯಾಸಂಗ ಮಾಡುತ್ತಿದ್ದ ಯುವಕ, ದೆಹಲಿಯ ಕೃಷಿಕಾನೂನು ವಿರೋಧಿಸಿ ನಡೆಯುತ್ತಿರುವ ರ‍್ಯಾಲಿಯಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

ಮೃತನನ್ನು ನರ್ವೀತ್ ಸಿಂಗ್ (27) ಎಂದು ಗುರುತಿಸಲಾಗಿದೆ. ಈತ ಆಸ್ಟ್ರೇಲಿಯಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದನು. ಇದೀಗ ರೈತ ರ‍್ಯಾಲಿ ಪ್ರಭಟನೆ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗಷ್ಟೇ ಹಿಂದಿರುಗಿದ್ದನು. ರಾಂಪುರದ ಬಿಲಾಸ್ ಪುರ್ ಪ್ರದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದನು. ಆದರೆ ಯುವಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವಿಚಾರ ಈತನ ಕುಟುಂಬದವರಿಗೆ ತಿಳಿದಿರಲಿಲ್ಲ. 3 ದಿನಗಳ ಹಿಂದೆ ದೆಹಲಿಗೆ ಹೋಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾನೆ. ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿಬಿದ್ದ ಪರಿಣಾಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ರೈತರು ಪ್ರತಿಭಟನೆ ವೇಳೆ ಟ್ರ್ಯಾಕ್ಟರ್‍ನನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದರು. ಹೀಗಾಗಿ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ಗೆ ಗುದ್ದಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ನಾವು ರಕ್ಷಣೆಗೆ ತೆರಳುವ ವೇಳೆ ಪರಿಸ್ಥಿತಿ ಇನ್ನಷ್ಟು ಬಿಗಿಡಾಯಿಸಿತ್ತು. ಈ ಅಪಘಾತದಲ್ಲಿ ನರ್ವೀತ್ ಸಿಂಗ್ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ ರೈತರು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರಿಂದ ಟ್ರ್ಯಾಕ್ಟರ್ ಮೇಲೆ ನಿಯಂತ್ರಣ ಕಳೆದುಕೊಂಡೆವು. ಆಗ ಅಪಘಾತದಲ್ಲಿ ನರ್ವೀತ್ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *