ಲಸಿಕೆ ಹಾಕಿಸಿಕೊಳ್ಳಿ ಅಂದಿದ್ದಕ್ಕೆ ಆರೋಗ್ಯ ಸಿಬ್ಬಂದಿಗೆ ಗ್ರಾಮಸ್ಥರಿಂದ ಹಲ್ಲೆ

ಭೋಪಾಲ್: ಕೊರೊನಾ ರೋಗಕ್ಕೆ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಆರೋಗ್ಯ ಸಿಬ್ಬಂದಿಗೆ   ಗ್ರಾಮಸ್ಥರು ಥಳಿಸಿರುವ ಘಟನೆ ಮಧ್ಯಪ್ರದೇಶದ ಒಂದು ಹಳ್ಳಿಯೊಂದರಲ್ಲಿ ನಡೆದಿದೆ.

ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಸಿಬ್ಬಂದಿಗಳ ತಂಡವು ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ಮಧ್ಯಪ್ರದೇಶದ ಉಜ್ಜೈನ್ ಜಿಲ್ಲೆಯ ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿತ್ತು. ಈ ವೇಳೆ ಪರ್ಡಿ ಸಮುದಾಯಕ್ಕೆ ಸೇರಿದ ಗ್ರಾಮಸ್ಥರು ತಮ್ಮ ಹಳ್ಳಿಗೆ ಬಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ಮೊದಲು ಕೂಡ ಆರೋಗ್ಯ ಸಿಬ್ಬಂದಿ ಈ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ಮನವರಿಕೆ ಮಾಡಲು ಯತ್ನಿಸಿದ್ದರು. ಆದರೆ ಆಗಲೂ ಸಹ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗಿರಲಿಲ್ಲ. ಮತ್ತೆ ತಂಡವು ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ, ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಹೇಳಲು ಮುಂದಾಗಿದ್ದರು. ಈ ವೇಳೆ, ಕೆಲವು ಗ್ರಾಮಸ್ಥರು ಆರೋಗ್ಯ ಸಿಬ್ಬಂದಿ ತಂಡದ ಓರ್ವ ವ್ಯಕ್ತಿ ಮೇಲೆ ದಾಳಿ ನಡೆಸಿದ್ದಾರೆ. ದಾಳಿಗೆ ಒಳಗಾದ ಮೊಹಮ್ಮದ್ ಖುರೇಷಿ ಅದೇ ಗ್ರಾಮ ಪಂಚಾಯತಿಯ ಮಹಿಳಾ ಪದಾಧಿಕಾರಿಯ ಪತಿ ಎಂದು ತಿಳಿದು ಬಂದಿದ್ದು, ಆತ ಕೂಡ ಆರೋಗ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿದು ಬಂದಿದೆ.

ಮಹಿಳಾ ತಹಶೀಲ್ದಾರ್, ಎನ್‍ಎಂ, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಪಟ್ವಾಡಿಗಳು ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಇರುವ ತಪ್ಪು ಕಲ್ಪನೆಗಳು ಹಾಗೂ ಗೊಂದಲಗಳನ್ನು ನಿವಾರಿಸಿ, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಪ್ರೇರೇಪಿಸಲು ಮುಂದಾಗಿದ್ದರು. ಈ ಕುರಿತಾಗಿ ತಹಶೀಲ್ದಾರ್ ಹಾಗೂ ಆರೋಗ್ಯ ಸಿಬ್ಬಂದಿ ಗ್ರಾಮಸ್ಥರ ಜೊತೆ ಮಾತನಾಡುತ್ತಿರುವಾಗ, 50 ಮಂದಿಯನ್ನೊಳಗೊಂಡ ಒಂದು ಗುಂಪು   ನಮ್ಮ ಮೇಲೆ ಮೇಲೆ ದಾಳಿ ಮಾಡಿದರು ಎಂದು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

ಲಸಿಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದರೆ, ಗ್ರಾಮಸ್ಥರು ನಮ್ಮ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿದರು. ತಹಶೀಲ್ದಾರ್ ಹಾಗೂ ತಂಡದ ಸದಸ್ಯರು ಪ್ರಾಣಾಪಾಯದಿಂದ ಪಾರಾದರು. ಆದರೆ ಈ ದಾಳಿಯಲ್ಲಿ ನನ್ನ ತಲೆಗೆ ಪೆಟ್ಟಾಗಿದೆ ಎಂದು ಗಾಯಗೊಂಡ ವ್ಯಕ್ತಿ ಶಕೀಲ್ ಮೊಹಮ್ಮದ್ ಖುರೇಷಿ ಹೇಳಿದ್ದಾರೆ. ಈ ದಾಳಿಗೆ ಸಂಬಂಧಿಸಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೆಚ್ಚುವರಿ ಎಸ್‍ಪಿ ಆಕಾಶ್ ಭೂರಿಯಾ ಹೇಳಿದರು.

Comments

Leave a Reply

Your email address will not be published. Required fields are marked *