ಲಾಕ್‍ಡೌನ್ ವಿಸ್ತರಿಸಿ 10,000 ಪರಿಹಾರ ಕೊಡಿ: ಹೆಚ್‍ಡಿಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರಿಸುವುದು ಸೂಕ್ತ ಎಂದು ಹೆಚ್ ಡಿಕೆ ಹೇಳಿದ್ದಾರೆ.

ಕೊರೊನಾ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರದ ಆದಾಯ ತೆರಿಗೆ ಕುಗ್ಗಿತ್ತು. ಆದರೆ ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯೊಂದರಲ್ಲೇ ಶೇ.150ರಷ್ಟು ಕಳೆದ ವರ್ಷಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.

ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೇ, ಸುಮಾರು ಒಂದು ಕೋಟಿ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ಕೊಡುವಂತೆ ಆಗ್ರಹಿಸಿದ್ದಾರೆ. ರೈತರು, ಶ್ರಮಿಕ ವರ್ಗ, ಕಾರ್ಮಿಕರಿಗೆ ತಲಾ 10 ಸಾವಿರ ರೂಪಾಯಿ ಏಕರೂಪ ಪರಿಹಾರ ಘೋಷಣೆ ಮಾಡಿದರೇ, 10 ಸಾವಿರ ಕೋಟಿ ರೂಪಾಯಿಗಳ ಹೊರೆಯನ್ನು ಭರಿಸಬೇಕಾಗುತ್ತದೆ. ವರ್ಷಕ್ಕೆ ಲಕ್ಷಾಂತರ ಕೋಟಿಗಳ ಬಜೆಟ್ ಘೋಷಣೆ ಮಾಡುವ ರಾಜ್ಯ ಸರ್ಕಾರಕ್ಕೆ ಇದೇನು ಭರಿಸಲಾಗದ ಹೊರೆಯಾಗದು ಎಂದು ಸಲಹೆ ನೀಡಿದ್ದಾರೆ.  ಇದನ್ನೂ ಓದಿ: ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ : ಡಿಕೆ ಶಿವಕುಮಾರ್

ಕೆಲವು ಅನಗತ್ಯ ಕಾಮಗಾರಿಗಳಿಗೆ 1,500 ಕೋಟಿ ರೂ ಅಥವಾ 2 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಮಂಜೂರು ಮಾಡುವುದನ್ನು ತಕ್ಷಣಕ್ಕೆ ನಿಲ್ಲಿಸುವುದು ಒಳಿತು. ಇಂತಹ ಕಾಮಗಾರಿಗಳ ಶೇ.30 ರಿಂದ 40ರಷ್ಟು ಹಣ ಉಪಯೋಗವಾಗುತ್ತಿಲ್ಲ. ತೋರ್ಪಡಿಕೆಗೆ ಪರಿಹಾರ ಘೋಷಣೆ ಮಾಡುವುದನ್ನು ಬಿಟ್ಟು, ಧರ್ಮ ಸಂಕಟಕ್ಕೆ ಸಿಲುಕಿರುವ ಜನತೆಗೆ ಬದ್ಧತೆಯ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಪ್ಯಾಕೇಜ್ ಘೋಷಣೆ ಮಾಡುವಂತೆ ಹೆಚ್ ಡಿ ಕೆ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೀವ ಇದ್ರೆ ಜೀವ ಇರುತ್ತದೆ, ಸರ್ಕಾರದ ಕಡ್ಡಾಯವಾಗಿ ಲಸಿಕೆ ಕೊಡಬೇಕು: ಡಿಕೆಶಿ

Comments

Leave a Reply

Your email address will not be published. Required fields are marked *