ವಿನಯ್ ಕುಲಕರ್ಣಿ ಜಾಮೀನು ಅರ್ಜಿ – ನಾಳೆಗೆ ವಿಚಾರಣೆ ಮುಂದೂಡಿಕೆ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಧಾರವಾಡ ಹೈಕೋರ್ಟ್‍ನಲ್ಲಿ ಇಡೀ ದಿನ ನಡೆದ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸಿಬಿಐ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ಸಿಬಿಐ ವಕೀಲರ ಪ್ರತಿವಾದ ಪೂರ್ಣಗೊಳ್ಳದ ಹಿನ್ನೆಲೆ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದ್ದು, ನಾಳೆ ಸಿಬಿಐ ಪರ ವಕೀಲರು ಪುನಃ ಪ್ರತಿವಾದ ಮುಂದುವರಿಸಲಿದ್ದಾರೆ.

ದಿನವಿಡಿ ನಡೆದ ವಾದ ಪ್ರತಿವಾದ ಹಿನ್ನೆಲೆ ನಾಳೆಗೆ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಸಿಬಿಐ ಪರ ವಕೀಲರು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್‍ನಲ್ಲಿಯೇ ಪ್ರತಿವಾದ ಮಂಡಿಸಿದರು. ಸಿಬಿಐ ಪರ ವಕೀಲರು ನಾಳೆ ಇನ್ನು ಹಲವು ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕಳೆದ ನವಂಬರ್ 20 ರಂದು ಸಿಬಿಐ ಬಂಧಿಸಿತ್ತು. ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *