ಶಿವಮೊಗ್ಗದಲ್ಲಿ ಲಾಕ್‍ಡೌನ್ ಬಗ್ಗೆ ನಾಳೆ ನಿರ್ಧಾರ: ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬೇಕಾ, ಬೇಡ್ವಾ ಎಂಬುದರ ಬಗ್ಗೆ ಮಂಗಳವಾರ ನಿರ್ಧಾರ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಇತ್ತೀಚೆಗೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾಳೆಯಿಂದ ಒಂದು ವಾರಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸರ್ಕಾರ ಲಾಕ್ ಡೌನ್ ಮಾಡಿ ಆದೇಶಿಸಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ವರ್ತಕರೇ ಮುಂಜಾನೆ 8 ರಿಂದ ಮಧ್ಯಾಹ್ನ 3ರವರೆಗೆ ವ್ಯಾಪಾರ ವಹಿವಾಟು ನಡೆಸಿ 3 ಗಂಟೆ ನಂತರ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡುತ್ತಿದ್ದಾರೆ. ಆದರೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮಾತ್ರ ಏರಿಕೆಯಾಗುತ್ತಿದೆ ಎಂದು ಅತಂಕ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಮಾಡಬೇಕಾ ಅಥವಾ ಬೇಡವಾ ಎಂಬುದನ್ನು ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *