ಸಂತೋಷ್ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಎಮ್.ಎಸ್ ರಾಮಯ್ಯ ಆಸ್ಪತ್ರೆ ವೈದ್ಯ ನರೇಶ್ ಶೆಟ್ಟಿ ಹೇಳಿದರು.

ಸಂತೋಷ್ ಆರೋಗ್ಯ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅವರು, ನಿದ್ದೆ ಮಂಪರಿನಲ್ಲೇ ಇರುವ ಸಂತೋಷ್ ಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿನ್ನೆ ರಾತ್ರಿಗಿಂತ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆಯಾಗಿದೆ. ಡಿಸ್ಚಾರ್ಜ್ ಮಾಡುವ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಮಧ್ಯಾಹ್ನ ನಂತರ ಡಿಸ್ಜಾರ್ಜ್ ಮಾಡಬಹುದು ತಿಳಿಸಿದರು.

ಸಂತೋಷ್ ಅವರನ್ನು ನಿನ್ನೆ ರಾತ್ರಿ 8.30ರ ಸುಮಾರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಮಧ್ಯಾಹ್ನ ನಂತರ ಜನರಲ್ ವಾರ್ಡಿಗೆ ಶಿಫ್ಟ್ ಮಾಡುತ್ತೇವೆ. ಅವರು ನಿನ್ನೆ ಬಂದಾಗ ಸ್ವಲ್ಪ ಮಂಕಾಗಿದ್ದರು. ಬೇರೆ ಯಾವುದೇ ಸಮಸ್ಯೆ ಇಲ್ಲ. ಎಷ್ಟು ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಅಂತ ಹೇಳೋಕೆ ಆಗಲ್ಲ ಎಂದು ನುಡಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ಆತ್ಮಹತ್ಯೆಗೆ ಯತ್ನ ಮಾಡಿರುವ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

Comments

Leave a Reply

Your email address will not be published. Required fields are marked *