ಸಿಎಂ ಬದಲಾವಣೆ ವದಂತಿಗೆ ತೆರೆ ಎಳೆದ ಡಿಸಿಎಂ ಲಕ್ಷ್ಮಣ ಸವದಿ

– ಮುಂದಿನ ಮೂರು ವರ್ಷವೂ ಬಿಎಸ್‍ವೈ ಅವರೇ ಸಿಎಂ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಂದಿನ ಮೂರು ವರ್ಷವೂ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು, ಮುಂದಿನ 3 ವರ್ಷ ಯಡಿಯೂರಪ್ಪ ಸಿಎಂ ಆಗಿರುತ್ತಾರೆ. ಯಾವುದೇ ಬದಲಾವಣೆ ಇಲ್ಲ. ಆದರೆ ನಾನು ರಾಜ್ಯಪಾಲರನ್ನು ಭೇಟಿಯಾಗಿ ದೆಹಲಿಗೆ ಬಂದಿದ್ದು ಕಾಕತಾಳೀಯವಷ್ಟೇ. ಸಿಎಂ ಬದಲಾವಣೆ ಬಗ್ಗೆ ವರಿಷ್ಠರೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ. ಕೇವಲ ಇಲಾಖೆಯ ಕೆಲಸ ನಿಮಿತ್ತ ಕೇಂದ್ರ ಸಚಿವರ ಭೇಟಿಗೆ ಬಂದಿದ್ದೆ. ಇದನ್ನೇ ಕಾರ್ಯಕರ್ತರು ತಪ್ಪಾಗಿ ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲರಿಗೆ ಕೆಲ ಸಮಯದ ಹಿಂದೆ ಶಸ್ತ್ರ ಚಿಕಿತ್ಸೆ ನಡೆದಿತ್ತು. ಆ ವೇಳೆ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ಸಮಯ ಕೋರಿದ್ದೆ. ಆದರೆ ಕೊರೊನಾ ಸೋಂಕಿನ ಕಾರಣದಿಂದ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಸಿಎಂ ಬಿಎಸ್‍ವೈ ಅವರು ರಾಜ್ಯಪಾಲರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಆದ್ದರಿಂದ ನಾನು ದೆಹಲಿಗೆ ಬರುವ ಮುನ್ನ ಭೇಟಿ ಮಾಡಿದ್ದೆ. ಇಲಾಖೆಯ ಕೆಲಸದ ಹಿನ್ನೆಲೆಯಲ್ಲಿ ನಾನು ಕೇಂದ್ರ ಹೆದ್ದಾರಿ ಸಚಿವರಾದ ನಿತಿತ್ ಗಡ್ಕರಿ ಹಾಗೂ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಅವರು ನಮ್ಮ ಮನವಿಗೆ ಪೂರಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದರು.

ರಾಜ್ಯ ಸರ್ಕಾರ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಹಿ ನೀಡಿದ್ದೆ. ನಡ್ಡಾ ಅವರೊಂದಿಗೆ ರಾಜಕೀಯ ಚರ್ಚೆ ಮಾಡಿಲ್ಲ. ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಕ್ಕಿಲ್ಲ. ದೆಹಲಿ ಭೇಟಿಗೆ ರೆಕ್ಕೆ ಪುಕ್ಕ ಕಟ್ಟುವ ಅವಶ್ಯಕ ಇಲ್ಲ ಎಂದರು.

Comments

Leave a Reply

Your email address will not be published. Required fields are marked *