‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಗಳ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಅವರು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಸ್ಪರ್ಧಿ ಅಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ಗೈರಾಗಿ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಭಿಮಾನಿಗಳು ಭಾರೀ ಚರ್ಚೆಗೆ ಕಾರಣರಾಗಿದ್ದರು. ಸದ್ಯ ಈ ಕುರಿತಂತೆ ಲಕ್ಷ್ಮಣ ಸವದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?
‘ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ. ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ. ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್‍ಗಳನ್ನು ಮಾಡದಿರಿ’ ಎಂದು ಮನವಿ ಮಾಡಿದ್ದಾರೆ.

‘ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು’ ಎಂದು ಮತ್ತೊಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ರಾಜಕೀಯ ವಿಪ್ಲವಗಳ ಬಗ್ಗೆ ಮಾಧ್ಯಮಗಳು ಅಪ್ರಬುದ್ಧ ವಿಶ್ಲೇಷಣೆಯಲ್ಲಿ ತೊಡಗುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ. ನಮ್ಮ ಲಕ್ಷ್ಯ ಆರೋಗ್ಯ ಕ್ರಾಂತಿಯ ಕಡೆಗೆ ಇರಬೇಕಾದ ಹೊತ್ತಿದು. ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಬಹುಬೇಗ ಒದಗಿರುವ ಮಹಾಮಾರಿಯ ಸಂಕಟದಿಂದ ಹೊರಬರಬೇಕಾಗಿರುವ ಸಮಯ. ಮಾಧ್ಯಮ ಮಿತ್ರರ ಆದ್ಯತೆಯು ಅದೇ ಆಗಿರಲಿ ಎಂಬ ಆಶಯ ಎಂದು ತಿಳಿಸಿದ್ದಾರೆ.

ಸರ್ಕಾರ ವರ್ಷಾಚರಣೆ ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆಯೂ ಸಮರ್ಥನೆ ನೀಡಿದ್ದಾರೆ. ಆದರೆ ಸರ್ಕಾರಕ್ಕೆ ವರ್ಷ ತುಂಬಿದ ಹೊತ್ತಲ್ಲೇ ಕಾರ್ಯಕ್ರಮ ಪೂರ್ವ ನಿರ್ಧರಿತವೇ ಎಂಬ ಅನುಮಾನ ಮೂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಫರ್ಧಿಸಿ ಸೋಲುಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಅಚ್ಚರಿ ಎಂಬಂತೆ ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲಾಗಿತ್ತು. ಸವದಿ ಅವರಿಗೆ ಡಿಸಿಎಂ ಪೋಸ್ಟ್ ಹಾಗೂ ಸಚಿವ ಸ್ಥಾನ ಲಭಿಸುವುದರ ಹಿಂದೆ ಹೈಕಮಾಂಡ್ ಕೃಪೆ ಇತ್ತು ಎನ್ನಲಾಗಿದೆ.

Comments

Leave a Reply

Your email address will not be published. Required fields are marked *