ಸುರೇಶ್ ಕುಮಾರ್ ಆತ್ಮವಂಚನೆ ಮಾಡಿಕೊಂಡು ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ – ಅಮರೇಗೌಡ

ಕೊಪ್ಪಳ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಆತ್ಮವಂಚನೆ ಮಾಡಿಕೊಂಡು ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದು ಕೊಂಡಿದ್ದಾರೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅಭಿಪ್ರಾಯಪಟ್ಟಿದ್ದಾರೆ.

ಕೊಪ್ಪಳದ ಕುಷ್ಟಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಅಮರೇಗೌಡ ಅವರು, ಜುಲೈ 3ನೇ ವಾರದಲ್ಲಿ ನಡೆಯಬೇಕಾಗಿದ್ದ ಪರೀಕ್ಷೆಯ ಬಗ್ಗೆ ಈಗಲೇ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಜುಲೈ ಮೊದಲ ವಾರದಲ್ಲಿ ಆಗಿನ ಪರಿಸ್ಥಿತಿ ನೋಡಿಕೊಂಡ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಸಿಎಂ, ಶಿಕ್ಷಣ ಸಚಿವರು ಹಾಗೂ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ನನಗೆ ಅಸಮಾಧಾನವಿದೆ ಎಂದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್

ಪಿಯುಸಿ ಪರೀಕ್ಷೆ ನಡೆಸಬೇಕು ಎನ್ನುವ ಹಂಬಲ ಶಿಕ್ಷಣ ಸಚಿವರಿಗೆ ಇತ್ತು. ಸಿಬಿಎಸ್‍ಇ ಪರೀಕ್ಷೆ ರದ್ದಾದ ಹಿನ್ನೆಲೆ, ಮೋದಿ ಅವರನ್ನು ವಿರುದ್ಧ ಹಾಕಿಕೊಳ್ಳಲಾಗದೆ ಪರೀಕ್ಷೆ ರದ್ದು ಮಾಡಿದ್ದಾರೆ. ಅನೇಕ ಬಾರಿ ಸಚಿವರೊಂದಿಗೆ ನಾನು ಮಾತನಾಡಿದ್ದೇನೆ. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ನಡೆಸಬೇಕು ಎನ್ನುವ ಮನಸ್ಥಿತಿಯಲ್ಲಿ ಸಚಿವರು ಇದ್ದರು. ಇದೀಗ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ್ದಾರೆ. ಪಿಯುಸಿ ಪರೀಕ್ಷೆ ರದ್ದಾಗಿದ್ದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಪಿಯುಸಿ ಪರೀಕ್ಷೆಯನ್ನು ಸ್ವಲ್ಪ ದಿನ ಕಾದು ನಡೆಸಬಹುದಿತ್ತು. ಸಚಿವರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇನೆ ಎಂದು ಹೇಳಿದ್ದು ಸ್ವಾಗತಾರ್ಹ ಎಂದು ನುಡಿದಿದ್ದಾರೆ. ಇದನ್ನೂ ಓದಿ:ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

Comments

Leave a Reply

Your email address will not be published. Required fields are marked *