ಹತ್ರಾಸ್ ತಲುಪಿದ ರಾಹುಲ್, ಪ್ರಿಯಾಂಕಾ ಗಾಂಧಿ-ಸಂತ್ರಸ್ತೆ ಕುಟುಂಬಸ್ಥರಿಗೆ ಸಾಂತ್ವನ

ಹತ್ರಾಸ್: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ ತಲುಪಿದ್ದು, ಸಂತ್ರಸ್ತೆಯ ಕುಟುಂಬಸ್ಥರನ್ನ ಭೇಟಿಯಾಗಿದ್ದಾರೆ. ಕೊಠಡಿಯೊಂದರಲ್ಲಿ ಕುಟುಂಬಸ್ಥರನ್ನು ಭೇಟಿಯಾಗಿರುವ ರಾಹುಲ್ ಮತ್ತು ಪ್ರಿಯಾಂಕಾ ಸಾಂತ್ವಾನ ಹೇಳಿದ್ದಾರೆ.

ಸಂತ್ರಸ್ತೆಯ ಕುಟುಂಬಸ್ಥರು ಪುಟ್ಟ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಗೆ ತೆರಳಿರುವ ಪ್ರಿಯಾಂಕ ಯುವತಿಯ ತಾಯಿಯನ್ನು ತಬ್ಬಿಕೊಂಡು ಸಮಾಧಾನ ಹೇಳುತ್ತಿರುವ ವಿಡಿಯೋವನ್ನು ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಪ್ರಕರಣದ ಹಿನ್ನೆಲೆ ಹತ್ರಾಸ್ ಗ್ರಾಮಕ್ಕೆ ಮಾಧ್ಯಮ ಸೇರಿದಂತೆ ರಾಜಕೀಯ ಮುಖಂಡರ ಪ್ರವೇಶಕ್ಕೆ ಉತ್ತರ ಪ್ರದೇಶ ಸರ್ಕಾರ ನಿರ್ಬಂಧ ಹಾಕಿರೋದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಆಗಮನ ಹಿನ್ನೆಲೆ ಸಂತ್ರಸ್ತೆ ಮನೆಯ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ನಾಯಕರ ಆಗಮನ ಮತ್ತು ನಿರ್ಗಮನಕ್ಕಾಗಿ ತಾತ್ಕಲಿಕ ಮಾರ್ಗ ನಿರ್ಮಿಸಿದ್ದಾರೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರೇ ಕೊಠಡಿಯಲ್ಲಿ ನಾಯಕರ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ.

ಅಕ್ಟೋಬರ್ 1ರಂದು ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಮುಂದಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಗ್ರೇಟರ್ ನೋಯ್ಡಾ ಬಳಿಯೇ ತಡೆದ ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದರು.

ದೆಹಲಿಯಿಂದ ಕಾರಿನಲ್ಲಿ ತೆರಳಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಹತ್ರಾಸ್‍ಗೆ ಭೇಟಿ ನೀಡಲು ಪೊಲೀಸರು ಅಡ್ಡಪಡಿಸಿದ ಹಿನ್ನೆಲೆಯಲ್ಲಿ ನಡೆದುಕೊಂಡು ಹೋಗಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾದ ಪರಿಣಾಮ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದರು.

ಏನಿದು ಹತ್ರಾಸ್ ಪ್ರಕರಣ?:
2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಮಾದರಿಯಲ್ಲಿಯೇ ಉತ್ತರಪ್ರದೇಶದ ಹುತ್ರಾಸ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆಪ್ಟೆಂಬರ್ 29 ಮೃತಪಟ್ಟಿದ್ದರು.

ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಗ್ರಾಮಕ್ಕೆ ಮಧ್ಯರಾತ್ರಿ ಯುವತಿಯ ಶವವನ್ನು ತೆಗೆದುಕೊಂಡು ಹೋಗಿ ಪೊಲೀಸರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆದರೆ ಮಧ್ಯರಾತ್ರಿ ಅಂತ್ಯಕ್ರಿಯೆ ಮಾಡುವುದು ನಮ್ಮ ಸಂಪ್ರದಾಯವಲ್ಲ. ಮೃತದೇಹ ನಮಗೆ ನೀಡಿ, ಬೆಳಗ್ಗೆ ಅಂತ್ಯಕ್ರಿಯೆ ಮಾಡುತ್ತೇವೆ ಎಂದು ಮನವಿ ಮಾಡಿಕೊಂಡರೂ ಪೊಲೀಸರು ಒಪ್ಪಿಗೆ ನೀಡರಲಿಲ್ಲ.

Comments

Leave a Reply

Your email address will not be published. Required fields are marked *