ಹಾಸನ ಜಿಲ್ಲೆಯ ಹಲವೆಡೆ ವ್ಯಾಪಕ ಮಳೆ-ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

-ಯಗಚಿ, ವಾಟೆಹೊಳೆ ಜಲಾಶಯ ಬಹುತೇಕ ಭರ್ತಿ

ಹಾಸನ: ಜಿಲ್ಲೆಯ ಹಲವೆಡೆ ಸತತ ಎರಡು ದಿನದಿಂದ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹೇಮಾವತಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಯಗಚಿ ಮತ್ತು ವಾಟೆಹೊಳೆ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.

ಬೇಲೂರು ತಾಲೂಕಿನಲ್ಲಿರುವ ವಾಟೆಹೊಳೆ ಜಲಾಶಯ ಗರಿಷ್ಟ 1.5 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಅಣೆಕಟ್ಟೆಯಿಂದ ನೀರನ್ನು ಹೊರಬಿಡಲಾಗಿದೆ. ಅದೇ ರೀತಿ ಆಲೂರು ತಾಲೂಕಿನಲ್ಲಿರುವ ಯಗಚಿ ಜಲಾಶಯ ಗರಿಷ್ಟ 3.4 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಣೆಕಟ್ಟೆಯಿಂದ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

ಹೇಮಾವತಿ ಅಣೆಕಟ್ಟು ಗರಿಷ್ಟ 37.103 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗ ಪ್ರಸ್ತುತ ಅಣೆಕಟ್ಟೆಯಲ್ಲಿ 21 ಟಿಎಂಸಿಯಷ್ಟು ನೀರು ಸಂಗ್ರಹವಿದೆ. ಹೇಮಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಕಲೇಶಪುರ ತಾಲೂಕಿನ ಹಲವೆಡೆ ರಸ್ತೆಗೆ ಮರ ಉರುಳಿ ಬಿದ್ದಿದೆ. ಕೆಲವೆಡೆ ಮನೆ ಮೇಲೆ ಮರ ಬಿದ್ದಿದ್ದು ಜಖಂ ಆಗಿದೆ. ಬಿಸಿಲೆ ಸಮೀಪ ಚಲಿಸುತ್ತಿದ್ದ ಕಾರ್ ಮೇಲೆ ಮರ ಬಿದ್ದಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Comments

Leave a Reply

Your email address will not be published. Required fields are marked *