ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಕ್ಕೆ 4 ಬಲಿ, 20 ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಬಹು ಅಂತಸ್ತಿನ ಕಟ್ಟಡ ಕುಸಿತಗೊಂಡು  ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸರ್ಜಾಪುರ ರಸ್ತೆಯ ಕಸವನಹಳ್ಳಿ ಬಳಿ ಘಟನೆ ನಡೆದಿದೆ.

ಕಟ್ಟದ ಕುಸಿದ ವೇಳೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 20 ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆ ಆರಂಭಿಸಿದೆ. ಸ್ಥಳಕ್ಕೆ ಸ್ಥಳಿಯ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ನೆರವಾಗಿದ್ದಾರೆ.

ಕಟ್ಟದ ನಿರ್ಮಾಣದ ವೇಳೆ ಮೂಲ ವಿನ್ಯಾಸವನ್ನ ಬದಲಾಯಿಸಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಿರುವ ಸಾಧ್ಯತೆ ಇದೆ. ಅಲ್ಲದೇ ಕಟ್ಟದ ಬೆಸ್ ಮೆಂಟ್ ಸರಿಯಾಗಿ ಅಳವಡಿಸದ ಕಾರಣ ಕಟ್ಟಡ ಈ ಮೊದಲೇ ಒಂದು ಭಾಗದಲ್ಲಿ ಬಾಗಿತ್ತು ಎಂಬ ಮಾಹಿತಿ ಲಭಿಸಿದೆ. ಪ್ರಸ್ತುತ ಈವರೆಗೆ ಅಗ್ನಿಶಾಮಕ ಸಿಬ್ಬಂದಿ 7 ಕಾರ್ಮಿಕರ ರಕ್ಷಣೆ ಮಾಡಿದ್ದು, ಹೆಚ್ಚಿನ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಕಟ್ಟಡ ರಫೀಕ್ ಎಂಬುವವರಿಗೆ ಸೇರಿದ್ದು ಎನ್ನಲಾಗಿದ್ದು, ಕಟ್ಟಡ ಕುಸಿತ ಬಳಿಕ ಕಟ್ಟಡ ಮಾಲೀಕ ರಫೀಕ್ ನಾಪತ್ತೆಯಾಗಿದ್ದಾರೆ.

ಘಟನೆ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಮೇಯರ್ ಸಂಪತ್ ರಾಜ್ ಅವರು, ಕಟ್ಟಡ ಕುಸಿತ ಕುರಿತು ಮಾಹಿತಿ ಲಭಿಸಿದ ತಕ್ಷಣ ಆಂಬ್ಯುಲೆನ್ಸ್, ರಕ್ಷಣಾ ತಂಡ ಹಾಗೂ ಅಧಿಕಾರಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ.

ಕಟ್ಟಡದ ಅಡಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಈಗಾಗಲೇ ರಕ್ಷಣೆ ಮಾಡಲಾಗಿರುವ ಕಾರ್ಮಿಕರು ಮಾಹಿತಿ ನೀಡಿದ ಪ್ರಕಾರ 20 ಕಾರ್ಮಿಕರು ಕಟ್ಟದ ಕೆಳಗೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನಾಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗುವುದು. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲಾಗುತ್ತದೆ ಹಾಗೂ ಮೃತರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Comments

Leave a Reply

Your email address will not be published. Required fields are marked *