ನಾಲ್ವರು ಅತೃಪ್ತ ಶಾಸಕರು ಕಾಂಗ್ರೆಸ್ಸಿನಿಂದ ಅಮಾನತು

ಬೆಂಗಳೂರು: ಸರ್ಕಾರದ ವಿರುದ್ಧ ಬಂಡಾಯ ಎದ್ದ ನಾಲ್ವರು ಅತೃಪ್ತ ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ.

ಇಂದಿನ ಶಾಸಕಾಂಗ ಸಭೆಗೆ ಮತ್ತು ಸದನಕ್ಕೆ ಕಡ್ಡಾಯವಾಗಿ ಹಾಜರಾಗಬೇಕೆಂದು ಸಿದ್ದರಾಮಯ್ಯ ವಿಪ್ ಜಾರಿ ಮಾಡಿದ್ದರು. ಆದರೆ ರಮೇಶ್ ಜಾರಕಿಹೊಳಿ(ಗೋಕಾಕ್), ನಾಗೇಂದ್ರ(ಬಳ್ಳಾರಿ), ಮಹೇಶ್ ಕುಮಟಳ್ಳಿ(ಅಥಣಿ), ಉಮೇಶ್ ಜಾಧವ್(ಚಿಂಚೋಳಿ) ಹಾಜರಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಮಾನತು ನಿರ್ಧಾರವನ್ನು ಕೈಗೊಂಡಿದ್ದಾರೆ.

ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.

ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನ ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *