9 ಕೋಟಿ ರೈತರಿಗೆ 18 ಸಾವಿರ ಕೋಟಿ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಒಟ್ಟು 9 ಕೋಟಿ ರೈತರ ಖಾತೆಗೆ 18 ಸಾವಿರ ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ.

ಬಟನ್ ಒತ್ತುವ ಮೂಲಕ ಪ್ರಧಾನಿ ಮೋದಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಮಾಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ರೈತರ ಖಾತೆಗೆ 2 ಸಾವಿರ ರೂ. ಹಾಕಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲಾಗುತ್ತದೆ.

ಪಿಎಂ-ಕಿಸಾನ್ ಯೋಜನೆಯಡಿ ಸಣ್ಣ ಹಾಗೂ ಮಧ್ಯಮ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ವರ್ಷಕ್ಕೆ ಮೂರು ಕಂತುಗಳಲ್ಲಿ 2 ಸಾವಿರ ರೂ.ಗಳಂತೆ ಹಣವನ್ನು ವರ್ಗಾಯಿಸಲಾಗುತ್ತದೆ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

ಇದೀಗ ವಿವಿಧ ರೈತ ಸಂಘಟನೆಗಳು ಹೋರಾಟ ನಡೆಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಂದು ಕಂತಿನ ಹಣವನ್ನು ಜಮೆ ಮಾಡಿದ್ದಾರೆ. ಮೂರು ಕಾನೂನುಗಳನ್ನು ರೈತರ ಹಿತವನ್ನು ಕಾಪಡಲು ತರಲಾಗಿದೆ. ಆದರೆ ಕೆಲವರು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ರೈತರಲ್ಲಿ ತುಂಬುತ್ತಿದ್ದಾರೆ. ಖಾಸಗಿ ಕಂಪನಿಗಳು ರೈತರ ಭೂಮಿಯನ್ನು ಕಸಿಯುತ್ತವೆ ಎಂದು ಹೇಳಲಾಗುತ್ತಿದೆ. ಖಾಸಗಿ ಕಂಪನಿಗಳು ಯಾವುದೇ ರೀತಿಯ ಲ್ಯಾಂಡ್ ಕಸಿಯುವುದಿಲ್ಲ. ಬಡ ರೈತರ ಹಿತಕ್ಕಾಗಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *