ಮಂಗಳೂರು: ಗಸ್ತಿನಲ್ಲಿ ತಿರುಗುತ್ತಿದ್ದ ಎಎಸ್‍ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮಂಗಳೂರು: ಉರ್ವಾ ಪೊಲೀಸ್ ಠಾಣೆ ಎಎಸ್‍ಐ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಹಿಲ್ ಸರ್ಕಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು, ರಾತ್ರಿ ಗಸ್ತಿನಲ್ಲಿದ್ದ ಐತಪ್ಪ ಅವರನ್ನು ಅಡ್ಡಗಟ್ಟಿ ಅವರ ತಲೆಗೆ ರಾಡ್‍ನಿಂದ ಹೊಡೆದು ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ತ್ರವವಾಗಿ ಬಿದ್ದಿದ್ದ ಎಎಸ್‍ಐ ಐತಪ್ಪ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದ್ದು ಚೇತರಿಸಿಕೊಂಡಿದ್ದಾರೆ.

ಮಂಗಳವಾರದಂದು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಎದುರು ಅನುಮತಿ ಇಲ್ಲದೆ ಪ್ರತಿಭಟಿಸಿದ್ದ ಪಿಎಫ್‍ಐ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ರು. ಈ ವೇಳೆ 7 ಮಂದಿ ಪೊಲೀಸ್ ಸೇರಿದಂತೆ ಹಲವು ಪ್ರತಿಭಟನಾಕಾರರಿಗೂ ಗಾಯಗಳಾಗಿತ್ತು. ಆದ್ರೆ ಪ್ರತಿಭಟನಾಕಾರರು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ, ಅವರನ್ನ ಸುಮ್ಮನೆ ಬಿಡೋದಿಲ್ಲ ಎಂದು ಘೋಷಣೆ ಕೂಗಿದ್ದರು. ಹೀಗಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದಲೇ ಎಎಸ್‍ಐ ಐತಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಅನುಮತಿ ಇಲ್ಲದೇ ಮಂಗಳೂರಿನಲ್ಲಿ ಪ್ರತಿಭಟನೆ: ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Comments

Leave a Reply

Your email address will not be published. Required fields are marked *