ಮಹದಾಯಿ ಹೋರಾಟಗಾರರಿಗೆ ಮಾತು ಕೊಟ್ಟು ತಪ್ಪಿದ ರಾಜ್ಯ ಸರ್ಕಾರ?

ಹುಬ್ಬಳ್ಳಿ: ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆಯುವುದಾಗಿ ಈ ಹಿಂದೆ ಹೇಳಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿದ್ಯಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆಯುವುದಾಗಿ ರಾಜ್ಯ ಸರ್ಕಾರ ಹೇಳಿತ್ತು.

ಆದರೆ ಈಗ ಮಹದಾಯಿ ಹೋರಾಟಗಾರ ಲೋಕನಾಥ್ ಹೆಬಸೂರ ಸೇರಿದಂತೆ 13 ಜನರ ಮೇಲೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ. ನವಲಗುಂದ ಜೆಎಂಎಫ್‍ಸಿ ನ್ಯಾಯಾಲಯ ಫೆ. 17 ರಂದು ಖುದ್ದು ಕೋರ್ಟ್ ವಿಚಾರಣೆಗೆ ಹಾಜರಾಗುಂತೆ ಸಮನ್ಸ್ ಜಾರಿ ಮಾಡಿದೆ.

ಮಹದಾಯಿ ಮತ್ತು ಕಾವೇರಿ ನದಿ ನೀರಿನ ಚಳವಳಿ ಸಂದರ್ಭಗಳಲ್ಲಿ ಅಮಾಯಕ ರೈತರ ಮೇಲೆ ಮೊಕದ್ದಮೆ ಹೂಡಿದ್ದರೆ ಅಂತಹ ಮೊಕದ್ದಮೆ ವಾಪಸ್ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅಂದಿನ ಗೃಹ ಸಚಿವರಾಗಿದ್ದ ಡಾ. ಜಿ ಪರಮೇಶ್ವರ್ ಅವರು 2016ರ ನವೆಂಬರ್ ನಲ್ಲಿ ವಿಧಾನಸಭೆಯಲ್ಲಿ ತಿಳಿಸಿದ್ದರು.

ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಪಿ ರಾಜೀವ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಕರಣವಾರು ಮೊಕದ್ದಮೆಗಳನ್ನು ಪರಿಶೀಲನೆ ಮಾಡಿ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು. ಸರ್ಕಾರ ರೈತರ ಪರವಾಗಿದ್ದು, ಯಾವುದೇ ಅಮಾಯಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.

ಇದಾದ ಬಳಿಕ 2017ರ ಫೆಬ್ರವರಿಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರ ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯುವ ಸಂಬಂಧ ನಿರ್ಧಾರ ಕೈಗೊಂಡಿತ್ತು. ಇದನ್ನೂ ಓದಿ: ಮಹದಾಯಿ ಹೋರಾಟಗಾರರ ಕೇಸ್ ವಾಪಸ್

Comments

Leave a Reply

Your email address will not be published. Required fields are marked *