ಪುತ್ರನಿಗೆ ಕ್ಯಾಬಿನೆಟ್‍ ನಲ್ಲಿ ಸ್ಥಾನ ನೀಡಿ: ಸಿದ್ದರಾಮಯ್ಯ ಲಾಬಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಮುಂದಾಗಿದ್ದು, ಇದರ ಬೆನ್ನಲ್ಲೇ ಪುತ್ರನ ಪರ ಲಾಬಿ ಶುರುಮಾಡಿದ್ದಾರೆ.

ಸಿದ್ದರಾಮಯ್ಯನವರು ಯತೀಂದ್ರ ಅವರಿಗೆ ಸಚಿವ ಸ್ಥಾನ ಕೊಡುವಂತೆ ಹೈಕಮಾಂಡ್ ನಲ್ಲಿ ಲಾಬಿ ಮಾಡುತ್ತಿದ್ದಾರೆ. ಮತ್ತೊಂದು ಕಡೆ ತನ್ನ ಬೆಂಬಲಿಗರ ಶಾಸಕರಿಂದಲೂ ಯತೀಂದ್ರ ಪರ ಲಾಬಿ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಈಗಾಗಲೇ ಹಿಲ್ಟನ್ ರೆಸಾರ್ಟ್ ಗೆ ಭಾನುವಾರ ಭೇಟಿ ಕೊಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ನಲ್ಲೂ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಶಾಸಕ ಯತೀಂದ್ರ ವೈದ್ಯರಾಗಿರುವುದರಿಂದ ಆರೋಗ್ಯ ಖಾತೆಯನ್ನು ನೀಡುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ.

ಎಚ್‍ಡಿ ಕುಮಾರಸ್ವಾಮಿ ಬುಧವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸೋದು ಪಕ್ಕಾ ಆಗಿದೆ. ಆದರೆ ಗುರುವಾರ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಮಾರನೇ ದಿನ ಅಂದರೆ ಶುಕ್ರವಾರ ಸಂಪುಟ ರಚನೆಯಾಗುವ ಸಾಧ್ಯತೆಗಳು ಇವೆ.

ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಗಳು ಎರಡೂ ಪಕ್ಷಗಳಲ್ಲಿ ಹೆಚ್ಚಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ಯಾರಾದರೂ ಕೈಕೊಟ್ಟರೆ ಕಷ್ಟ ಎನ್ನುವ ಕಾರಣಕ್ಕಾಗಿ ಉಭಯ ಪಕ್ಷಗಳ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *