ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಅನುಮಾನಾಸ್ಪದ ಸಾವು

-ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕೋಲ್ಕತ್ತಾ: ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಯುವಕನ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುರುಲಿಯಾ ಜಿಲ್ಲೆಯ ಬಲರಾಮ್‍ಪುರ ಗ್ರಾಮ ಡಾಬ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ದೊರೆತಿದೆ. 32 ವರ್ಷದ ದುಲಾಲ್ ಕುಮಾರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ಬಿಜೆಪಿ ಸ್ಥಳೀಯ ಕಾರ್ಯಕರ್ತನಾಗಿದ್ದು, ಶುಕ್ರವಾರ ನಿಗೂಢವಾಗಿ ನಾಪತ್ತೆಯಾಗಿದ್ದರು.

ಘಟನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀ, ಕಳೆದ ಬುಧವಾರ ನಡೆದ ತ್ರಿಲೋಚನ್ ಮೆಹಾಟೊ ಕೊಲೆಯ ಮಾದರಿಯಲ್ಲಿ ದುಲಾಲ್ ಕುಮಾರ್‍ನ ಕೊಲೆಯಾಗಿದೆ ಎಂದು ತಮ್ಮ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ.

ಬುಧವಾರ 20 ವರ್ಷದ ತ್ರಿಲೋಚನ್ ಮೆಹಾಟೊ ಶವವು ಪುರುಲಿಯಾ ಜಿಲ್ಲೆಯ ಬಲರಾಮ್‍ಪುರದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಸಿಕ್ಕಿತ್ತು. ಟೀ ಶರ್ಟ್ ಮೇಲೆ ಬಿಜೆಪಿ ಪರ ಕೆಲಸ ಮಾಡುವ ಕಾರ್ಯಕರ್ತರಿಗೆ ಇದೇ ರೀತಿ ಶಿಕ್ಷೆ ಎಂದು ಬರೆಯಲಾಗಿತ್ತು. ಪತ್ರ ದೊರೆತ ಬಳಿಕ ಪಕ್ಷದಲ್ಲಿ ಇದ್ದಿದ್ದಕ್ಕೆ ಹತ್ಯೆ ನಡೆದಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಶುಕ್ರವಾರ ದುಲಾಲ್ ಕುಮಾರ್‍ನ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಇಲಾಖೆಯು ಕಾನೂನು ಸುವ್ಯವಸ್ಥೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಸುತ್ತ ಪ್ರತಿಭಟನೆ ಮಾಡಿದ್ದರು.

https://twitter.com/ShobhaBJP/status/1002773233341362176

ಈ ಕುರಿತಂತೆ ರಾಜ್ಯ ಬಿಜೆಪಿ ಮುಖ್ಯಸ್ಥ ದಿಲೀಪ್ ಗೋಶ್ ಮತನಾಡಿ, ತೃಣಮೂಲ ಕಾಂಗ್ರೆಸ್ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಳಿಕ, ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎದುರಾಳಿಗಳನ್ನು ಹತ್ತಿಕ್ಕಲು ಸರ್ಕಾರ ಈ ರೀತಿ ಕುತಂತ್ರ ನಡೆಸುತ್ತಿದೆ. ನಮ್ಮ ಪಕ್ಷವು ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

ಪಂಚಾಯಿತಿ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದ್ರೆ ಚುನಾವಣೆಯಲ್ಲಿ ಟಿಎಂಸಿ 839ರಲ್ಲಿ 645 ಸೀಟ್ ಗಳಿಸಿತ್ತು. 38 ಜಿಲ್ಲಾ ಪಂಚಾಯಿತಿಗಳಲ್ಲಿ ಟಿಎಂಸಿ 26 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದರೆ, ಬಿಜೆಪಿ ಕೇವಲ 9 ರಲ್ಲಿ ಜಯಗಳಿಸಿತ್ತು.

Comments

Leave a Reply

Your email address will not be published. Required fields are marked *