ನಿಂತಿದ್ದ ಶಾಲಾ ಬಸ್‍ಗೆ ಖಾಸಗಿ ಬಸ್ ಗುದ್ದಿ ವಿದ್ಯಾರ್ಥಿಗಳು ಸೇರಿದಂತೆ 7 ಮಂದಿ ಸಾವು!

ಲಕ್ನೋ: ಹೆದ್ದಾರಿಯಲ್ಲಿ ನಿಂತಿದ್ದ ಶಾಲಾ ವಾಹನಕ್ಕೆ ಖಾಸಗಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ 6 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ತಿರ್ವಾ ಗ್ರಾಮದಲ್ಲಿ ಸಂಭವಿಸಿದೆ.

ಕನ್ನೌಜ್ ಜಿಲ್ಲೆಯ ತಿರ್ವಾ ಗ್ರಾಮದ ಲಕ್ನೋ-ಆಗ್ರಾ ಹೆದ್ದಾರಿಯ ಬಳಿ ಇಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಕಬೀರನಗರ ಜಿಲ್ಲೆಯ ಪ್ರಭಾ ದೇವಿ ವಿದ್ಯಾಲಯಕ್ಕೆ ಸೇರಿದವರೆಂದು ತಿಳಿದು ಬಂದಿದ್ದು. ಇವರು ಕಬೀರನಗರದಿಂದ ಹರಿದ್ವಾರಕ್ಕೆ 2 ಪ್ರತ್ಯೇಕ ಬಸ್‍ಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಶಾಲಾ ಬಸ್‍ನ ಡೀಸೆಲ್ ಖಾಲಿಯಾಗಿದ್ದರಿಂದ ಇನ್ನೊಂದು ಬಸ್‍ನ ಮೂಲಕ ಡೀಸೆಲ್ ತುಂಬಿಸಿಕೊಳ್ಳುತ್ತಿದ್ದರು. ಅದೇ ಸಮಯ ವೇಗವಾಗಿ ಬಂದ ಇನ್ನೊಂದು ಖಾಸಗಿ ಬಸ್ ನಿಂತಿದ್ದ ಶಾಲಾ ಬಸ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಾಲಾ ಬಸ್‍ನಲ್ಲಿದ್ದ 7 ಮಂದಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತರಲ್ಲಿ 6 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಕೂಡ ಸೇರಿದ್ದಾರೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಉತ್ರರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಿದ್ದಾರೆ. ಘಟನೆ ಕುರಿತು ದೂರು ದಾಖಲಿಸಿಕೊಂಡು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Comments

Leave a Reply

Your email address will not be published. Required fields are marked *