ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಮಾನ ನಿಲ್ದಾಣದ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲದ ಆದಿತ್ಯ ರಾವ್ (34) ಬಂಧಿತ ಆರೋಪಿಯಾಗಿದ್ದಾನೆ. ಕಳೆದ 15 ದಿನಗಳಲ್ಲಿ ಎರಡು ಬಾರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಗೆ ಕರೆ ಮಾಡಿ ವಿಮಾನ ನಿಲ್ದಾಣವನ್ನು ಸ್ಟೋಟಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆಯೂ ಸಹ ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗವನ್ನು ಸ್ಪೋಟಿಸುವುದಾಗಿ ಇ-ಮೇಲ್ ಮಾಡಿದ್ದನು. ಇದರಿಂದ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.

ಹುಸಿ ಬಾಂಬ್ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರವಾಗಿ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಬಿಇ, ಎಂಬಿಎ ವಿದ್ಯಾಭ್ಯಾಸ ಮಾಡಿಕೊಂಡು, ಕೆಲ ತಿಂಗಳ ಹಿಂದೆಯಷ್ಟೆಯೇ ಕೆಐಎಎಲ್‍ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಅಲ್ಲಿನ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲವೆಂದು ಕೆಲಸ ಬಿಟ್ಟಿದ್ದನು. ಅಧಿಕಾರಿಗಳ ಮೇಲಿನ ಕೋಪಕ್ಕೆ ಈ ರೀತಿ ಬೆದರಿಕೆ ಮಾಡಿರುವುದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅಲ್ಲದೇ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಹಾಕಿರುವುದದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದು, ಘಟನೆ ಸಂಬಂಧ ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *