`ಸದಾ ಶಾಂತ ಸ್ವರೂಪದ ಮೇರು ಪ್ರತಿಭೆ’ – ಬ್ರಹ್ಮಾವರ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಸದಾಶಿವ ಬ್ರಹ್ಮಾವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವೆ ಜಯಮಾಲ, ನಟರಾದ ದರ್ಶನ್ ಹಾಗೂ ಕಿಚ್ಚ ಸುದೀಪ್ ಸೇರಿದಂತೆ ಅನೇಕರು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗದಲ್ಲಿ ಸಜ್ಜನ ನಟ ಎಂದೇ ಸದಾಶಿವ ಬ್ರಹ್ಮಾವರ ಅವರು ಹೆಸರಾಗಿದ್ದರು. ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ.

ಖ್ಯಾತ ನಟ, ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಸದಾಶಿವ ಬ್ರಹ್ಮಾವರ ಅವರ ನಿಧನ ನೋವುಂಟು ಮಾಡಿದೆ. ಸಜ್ಜನ ನಟ ಎಂದೇ ಹೆಸರಾಗಿದ್ದ ಅವರು, ಪ್ರತಿ ಪಾತ್ರಗಳಿಗೂ ಜೀವ ತುಂಬಿ ಅಭಿನಯಿಸುತ್ತಿದ್ದರು ಎಂದು ಬರೆದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.

ಕನ್ನಡ ರಂಗಭೂಮಿ, ಚಿತ್ರರಂಗಗಳ ಹೆಸರಾಂತ ನಟ ಸದಾಶಿವ ಬ್ರಹ್ಮಾವರ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಅವರು ತಮ್ಮ ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿಗೆ ಕಾಲಿಟ್ಟು, 8 ದಶಕಗಳ ಕಾಲ ನಟರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಸಚಿವೆ ಜಯಮಾಲಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಸದಾಶಿವ ಬ್ರಹ್ಮಾವರ ಅವರೊಂದಿಗೆ ಕೆಲಸ ಮಾಡಿದ ಅವಕಾಶ ನನಗೆ ದೊರೆತಿದ್ದು ಅದೃಷ್ಟ. ಸದಾ ಶಾಂತ ಸ್ವರೂಪದ ಮೇರು ಪ್ರತಿಭೆ. ಅವರ ಅಗಲಿಕೆ ದುಃಖ ತಂದಿದೆ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗಕ್ಕಾಗಿ ದುಡಿದ ಹಿರಿಯ ನಟರಾದ ಸದಾಶಿವ ಬ್ರಹ್ಮಾವರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *