ಚಾಲಕನಿಂದ ಸಡನ್ ಬ್ರೇಕ್- ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ

– ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಮುಂದೆ ಹೋಗುತ್ತಿದ್ದ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಸ್ಪೀಡಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಭಾರೀ ಅನಾಹುತ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡೂ ಲಾರಿಯಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ತುಮಕೂರು-ಬೆಂಗಳೂರು ರಸ್ತೆಯ ವೃತ್ತವೊಂದರಲ್ಲಿಯೇ ಘಟನೆ ಸಂಭವಿಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

ಎರಡೂ ಲಾರಿಗಳು ಬೆಂಗಳೂರು ಕಡೆಗೆ ಬರತ್ತಿದ್ದು, ವೇಗವಾಗಿದ್ದವು. ಮುಂದಿನ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆ ಲಾರಿ ಮುಂದಿನ ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಮುಂದಿನ ಲಾರಿಯೂ ಜಖಂಗೊಂಡಿದ್ದು, ಭಾರೀ ಅನಾಹುತದಿಂದ ಚಾಲಕರಿಬ್ಬರೂ ಪಾರಾಗಿದ್ದಾರೆ.

ಹಿಂದೆ ಬರುತ್ತಿದ್ದ ಲಾರಿ ರಸ್ತೆ ಮಧ್ಯದಲ್ಲಿಯೇ ನಿಂತಿದ್ದರಿಂದ ಕೆಲಹೊತ್ತು ಭಾರೀ ಪ್ರಮಾಣದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *