ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆಯುತ್ತಿದ್ದ ಯುವಕನ ವಿರುದ್ಧ ಉಡುಪಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ನಿವಾಸಿ ಪ್ರವೀಣ್ ಯಕ್ಷಿಮಠ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದ ಆರೋಪಿ. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರವೀಣ್ ಯಕ್ಷಿಮಠ ಪೋಸ್ಟ್ ಹಾಕುತ್ತಿದ್ದಾನೆ. ಅಷ್ಟೇ ಅಲ್ಲದೆ ಅವರ ಬಗ್ಗೆ ಅಶ್ಲೀಲವಾಗಿ ಬರೆಯುತ್ತಿದ್ದಾರೆ. ಅಂತಹ ಬರಹಗಳನ್ನು ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಶೇರ್ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

ಈ ಸಂಬಂಧ ಉಡುಪಿಯ ಎಸ್ಪಿ ಲಕ್ಷ್ಮಣ ನಿಂಬರಗಿ ಅವರಿಗೂ ದೂರು ನೀಡಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಲಾಗಿದ್ದು, 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಕಳೆದ ಕೆಲ ದಿನಗಳಿಂದ ‘ಗೋ ಬ್ಯಾಕ್ ಶೋಭಾ’ ಹೆಸರಲ್ಲಿ ಅಭಿಯಾನವೂ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
ಈ ಎಲ್ಲಾ ಬೆಳವಣಿಗೆಗಳನ್ನು, ಬರಹದ ದಾಖಲೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ರವಾನಿಸಲಾಗಿದೆ.

ಬಿಜೆಪಿಯ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಆರೋಪಿಯ ವಿರುದ್ಧ ದೂರು ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ಸಂಸದೆಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಬಾರದು. ಚುನಾವಣಾ ಅಭ್ಯರ್ಥಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಎಲ್ಲರಿಗೂ ಇದೆ. ತೇಜೋವಧೆ ಮಾಡುವುದು ತಪ್ಪು ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply