ಮತಕ್ಕಾಗಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಹತ್ಯೆ: ರಾಮ್ ಗೋಪಾಲ್ ಯಾದವ್

ಲಕ್ನೋ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದ ಅವರು, ಜಮ್ಮು ಮತ್ತು ಶ್ರೀನಗರ ಮಧ್ಯೆ ಯಾವುದೇ ತಪಾಸಣೆ ನಡೆಯಲಿಲ್ಲ. ಜೊತೆಗೆ ಯೋಧರು ಸಾಮಾನ್ಯ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು ಎಂದು ರಾಮ್ ಗೋಪಾಲ್ ಯಾದವ್ ಆರೋಪಿಸಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಪಿತೂರಿ ನಡೆದಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆಗೆ ನೀಡಲು ಸಾಧ್ಯವಾಗುತ್ತದೆ. ತನಿಖೆಯ ಬಳಿಕ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಹೊರಬೀಳುತ್ತವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು ಇದೇ ತಿಂಗಳು ಕೂಡ ಇಂತಹದ್ದೇ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಹೀಗಾಗಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿ ನಡೆದಿದೆ ಎಂದು ಬಿ.ಕೆ.ಪ್ರಕಾಶ್ ಹೇಳಿದ್ದರು.

ಜಮ್ಮು-ಕಾಶ್ಮೀರ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಅದಿಲ್ ಅಹ್ಮದ್ ದಾರ್ ಸ್ಫೋಟಕ ತುಂಬಿದ್ದ ತನ್ನ ಇಕೋ ಕಾರನ್ನು ಸಿಆರ್‌ಪಿಎಫ್ ಯೋಧರ ಬಸ್ಸಿಗೆ ಗುದ್ದಿದ್ದ. ಪರಿಣಾಮ 40 ಯೋಧರು ಹುತಾತ್ಮರಾಗಿದ್ದರು. ದಾಳಿಗೆ ಪ್ರತ್ಯುತ್ತರ ನೀಡಿದ ಭಾರತೀಯ ವಾಯು ಪಡೆಯು ಪಾಕಿಸ್ತಾನದ ಉಗ್ರರ ಮೂರು ನೆಲೆಗಳ ಮೇಲೆ ದಾಳಿ ಮಾಡಿತ್ತು.

Comments

Leave a Reply

Your email address will not be published. Required fields are marked *