ಐಟಿ ಇಲಾಖೆ ಅಧಿಕಾರಿಗಳ ವಿರುದ್ಧ ಕುಮಾರಸ್ವಾಮಿ ಮತ್ತೆ ಕಿಡಿ

ಬೆಂಗಳೂರು: ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮತ್ತೆ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿರುವ ಸಿಎಂ, ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ತಂಗಿರುವ ಐಟಿ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗುತ್ತಿದೆ. ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಸಿಎಂ ಒತ್ತಾಯಿಸಿದ್ದಾರೆ.

ಹಾಸನ, ಮಂಡ್ಯ, ಶಿವಮೊಗ್ಗ, ಮೈಸೂರು, ಕನಕಪುರ, ಚಿಕ್ಕಮಗಳೂರಿನಲ್ಲಿ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಶೋಧ ಕಾರ್ಯದ ಬಳಿಕ ಅಂದು ರಾತ್ರಿಯೇ ಐಟಿ ಅಧಿಕಾರಿಗಳು ಹೊರಟಿದ್ದರು ಎನ್ನಲಾಗಿತ್ತು. ಆದರೆ ಈಗ ಸಿಎಂ ಕುಮಾರಸ್ವಾಮಿ ಅವರು, ಐಟಿ ಅಧಿಕಾರಿಗಳು ಮೈಸೂರಿನಲ್ಲಿಯೇ ಇದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನ ವೆಲ್ಲೋರ್ ಜಿಲ್ಲೆಯ ಕಟ್ಟಾಡಿಯಲ್ಲಿರುವ ಡಿಎಂಕೆ ಖಜಾಂಚಿ ದೊರೈ ಮುರುಗನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಜೊತೆಗೆ ಸೇರಿ ಚುನಾವಣಾ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಐಟಿ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ಡಿಎಂಕೆ ಮುಖಂಡರು ದೂರಿದ್ದಾರೆ.

Comments

Leave a Reply

Your email address will not be published. Required fields are marked *